ಬೆಂಗಳೂರು: ಕರ್ನಾಟಕದ ಮುಂದಿನ ಮುಖ್ಯಮಂತ್ರಿಯನ್ನಾಗಿ ಬ್ರಾಹ್ಮಣ ಸಮಾಜದ ಓರ್ವ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿ ಹೈಕಮಾಂಡ್ ಉತ್ಸುಕವಾಗಿದೆ ಎಂದು ಉಸ್ತುವಾರಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ವಿರೋಧಿ ಬಣದಲ್ಲಿ ಮಾತುಗಳು ಕೇಳಿಬರುತ್ತಿವೆ. ಅದರಲ್ಲೂ ಕೇಂದ್ರ ಸಚಿವ, ಸಂಸದ ಪ್ರಲ್ಹಾದ ಜೋಶಿ ಬದಲು ಬಿ.ಎಲ್.ಸಂತೋಷ್ ಅವರ ಬಗ್ಗೆ ಹೈಕಮಾಂಡ್ಗೆ ಹೆಚ್ಚಿನ ಒಲವಿದೆ ಎಂಬ ಮಾತುಗಳೂ ಕೇಳಿಬರುತ್ತಿವೆ.
ಬ್ರಾಹ್ಮಣ ಸಮುದಾಯದವರು ಸಿಎಂ ಆಗಿ ಆಯ್ಕೆಯಾದರೆ ಎಸ್ಟಿ ಸಮುದಾಯದವರು ಉಪ ಮುಖ್ಯಮಂತ್ರಿ ಆಗುವುದು ಖಚಿತವಾಗಿದೆ. ಹಾಗಾದಲ್ಲಿ ವಾಲ್ಮೀಕಿ ಸಮುದಾಯದ ನಾಯಕ ಶ್ರೀರಾಮುಲು ಅವರಿಗೂ ಅದೃಷ್ಟ ಖುಲಾಯಿಸುವ ಸಾಧ್ಯತೆಯಿದೆ.
ಹಳೆ ಮೈಸೂರು ಭಾಗದಲ್ಲಿ ಪಕ್ಷ ಸಂಘಟನೆಗೆ ಡಿಸಿಎಂ ಸೂತ್ರ ರಚಿಸುವ ಸಾಧ್ಯತೆಯಿದ್ದು, ಒಕ್ಕಲಿಗ ಸಮುದಾಯದ ಡಿಸಿಎಂ ಆಯ್ಕೆಗೆ ಬಿಜೆಪಿ ಸೂತ್ರ ರಚಿಸಿದೆ ಎಂದು ಹೇಳಲಾಗುತ್ತಿದೆ. ಸಿ.ಪಿ.ಯೋಗೇಶ್ವರ್ ಸಹ ಡಿಸಿಎಂ ಆಗಿ ಆಯ್ಕೆಯಾಗುವ ನಿರೀಕ್ಷೆಯಲ್ಲಿದ್ದಾರೆ. ಒಂದುವೇಳೆ ಮುಖ್ಯಮಂತ್ರಿ ಸ್ಥಾನಕ್ಕೆ ಬ್ರಾಹ್ಮಣ ಸಮುದಾಯವನ್ನು ಪರಿಗಣಿಸದೇ ಹೋದಲ್ಲಿ ಅರವಿಂದ ಬೆಲ್ಲದ್ ಸಿಎಂ ಆಗುವ ಸಾಧ್ಯತೆ ದಟ್ಟವಾಗಿದೆ. ಸಂಜೆ ದೆಹಲಿಯಿಂದ ಬಿಜೆಪಿಯ ವೀಕ್ಷಕರು ರಾಜ್ಯಕ್ಕೆ ಬರುವ ಸಾಧ್ಯತೆಯಿದ್ದು, ವೀಕ್ಷಕರು ಬಂದ ಬಳಿಕ ಸ್ಪಷ್ಟ ಚಿತ್ರಣ ಸಿಗಲಿದೆ.
ಸಿಎಂ ಸ್ಥಾನಕ್ಕೆ ಇನ್ನೂ ಇಬ್ಬರು ನಾಯಕರು ಹೆಸರು ಸಹ ಪ್ರಬಲವಾಗಿ ಕೇಳಿಬರುತ್ತಿದೆ. ಸಂಸದ ಶಿವಕುಮಾರ ಉದಾಸಿ ಮತ್ತು ವಿಧಾನಸಭೆ ಸ್ಪೀಕರ್ ಮತ್ತು ಹಿರಿಯ ಬಿಜೆಪಿ ನಾಯಕ ವಿಶ್ವೇಶ್ವರ ಹೆಗಡೆ ಕಾಗೇರಿ ಅವರ ಹೆಸರುಗಳು ಸಹ ಬಿಜೆಪಿ ಪಾಳಯದಲ್ಲಿ ಕೇಳಿಬರುತ್ತಿವೆ.
ಈ ಮಧ್ಯೆ ಮುಖ್ಯಮಂತ್ರಿಯಾಗಲು ಕಸರತ್ತು ನಡೆಸುತ್ತಿರುವ ಶಾಸಕ ಮುರುಗೇಶ್ ನಿರಾಣಿ ಅವರ ಬೀಳಗಿ ಕ್ಷೇತ್ರದ ಬಿಜೆಪಿ ಮುಖಂಡರು,ಕಾರ್ಯಕರ್ತರು ಬೆಂಗಳೂರಿನತ್ತ ಪ್ರವಾಸ ಬೆಳೆಸಿದ್ದಾರೆ. ಇದು ಕುತೂಹಲಕ್ಕೆ ಕಾರಣವಾಗಿದೆ.