ಬೆಂಗಳೂರು: ಕರ್ನಾಟಕ ರಾಜ್ಯದ ನೂತನ ಮುಖ್ಯಮಂತ್ರಿ ಹುದ್ದೆಗೆ ಹೊಸಬರನ್ನು ನೇಮಿಸುವ ಕುರಿತು ಖಾಸಗಿ ಹೋಟೆಲ್ನಲ್ಲಿ ಇಂದು ಸಂಜೆ 7 ಗಂಟೆಗೆ ಬಿಜೆಪಿ ಶಾಸಕಾಂಗ ಪಕ್ಷದ ಸಭೆ ನಿಗದಿಯಾಗಿದ್ದು, ರಾಜ್ಯ ಬಿಜೆಪಿ ಉಸ್ತುವಾರಿ ಅರುಣ್ ಸಿಂಗ್, ಸಹ ಉಸ್ತುವಾರಿ ಡಿ.ಕೆ.ಅರುಣ, ಕೇಂದ್ರೀಯ ವೀಕ್ಷಕ ಕಿಶನ್ ರೆಡ್ಡಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಸಭೆಯಲ್ಲಿ ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ.
ಬೆಂಗಳೂರಿನ ಕ್ಯಾಪಿಟಲ್ ಹೊಟೇಲ್ನಲ್ಲಿ ನಡೆಯಲಿರುವ ಸಭೆಯಲ್ಲಿ ಪಕ್ಷದ ಮುಖಂಡರು ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಹೆಸರನ್ನು ಅಂತಿಮಗೊಳಿಸುವ ಸಾಧ್ಯತೆ ಇದೆ ಎನ್ನಲಾಗಿದ್ದು, ರಾತ್ರಿಯ ಒಳಗೆ ನಿರ್ಧಾರ ಹೊರಬೀಳುವ ನಿರೀಕ್ಷೆ ಇದೆ. ರಾಜ್ಯ ಬಿಜೆಪಿ ಕಚೇರಿಯಿಂದಲೇ ಶಾಸಕಾಂಗ ಸಭೆ ಬಗ್ಗೆ ಸೂಚನೆ ನೀಡಲಾಗಿದ್ದು, ಸಭೆಗೆ ಹಾಜರಾಗಲು ಬಿಜೆಪಿ ಶಾಸಕರಿಗೆ ತಿಳಿಸಲಾಗಿದೆ. ಯಡಿಯೂರಪ್ಪ ಸೇರಿದಂತೆ 119 ಬಿಜೆಪಿ ಶಾಸಕರಿಗೂ ಸಂಜೆ 7 ಗಂಟೆಗೆ ಶಾಸಕಾಂಗ ಸಭೆಗೆ ಹಾಜರಾಗಲು ಮಾಹಿತಿ ನೀಡಲಾಗಿದ್ದು, ಉಸ್ತುವಾರಿ ಸಿಎಂ ಯಡಿಯೂರಪ್ಪ ನಡೆ ಬಗ್ಗೆಯೂ ಕುತೂಹಲ ಮೂಡಿದೆ.
ಕೇಂದ್ರದಿಂದ ಬರಲಿರುವ ನಾಯಕರು ಇಂದು ಮದ್ಯಾಹ್ನ 3 ಘಂಟೆ ವೇಳೆಗೆ ಬೆಂಗಳೂರಿನ ವಿಮಾನ ನಿಲ್ದಾಣಕ್ಕೆ ಆಗಮಿಸಲಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.