ಬೆಂಗಳೂರು, ಜು.27- ರಾಜ್ಯದ 4 ಸಾರಿಗೆ ನಿಗಮಗಳು ಮತ್ತೆ ಹೋರಾಟಕ್ಕೆ ಮುಂದಾಗಿದ್ದು, ಜುಲೈ 29 ರಂದು ನಗರದ ಫ್ರೀಡಂ ಪಾರ್ಕ್ನಲ್ಲಿ ನಡೆಸಲಿವೆ. ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ಫೆಡರೇಷನ್ ಅಧ್ಯಕ್ಷ ಹೆಚ್.ಡಿ.ರೇವಪ್ಪ, ಕಳೆದ ಏಪ್ರಿಲ್ನಲ್ಲಿ ಸಾರಿಗೆ ನೌಕರರ ಮುಷ್ಕರ ನಿರತರ ಬೇಡಿಕೆಗಳನ್ನು ಸರ್ಕಾರ ಈಡೇರಿಸಲಿಲ್ಲ, ಮುಷ್ಕರದಲ್ಲಿ ಪಾಲ್ಗೊಂಡಿದ್ದ ಕಾರ್ಮಿಕರನ್ನು ತೀವ್ರವಾದ ಶಿಕ್ಷೆಗೆ ಗುರಿಪಡಿಸಲಾಗಿದೆ.
4 ಸಾರಿಗೆ ನಿಗಮಗಳಲ್ಲಿ ಸಾವಿರಾರು ಕಾರ್ಮಿಕರನ್ನು ವಜಾ, ವರ್ಗಾವಣೆ , ಅಮಾನತ್ತು ಮಾಡಲಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು. ನಿವೃತ್ತಿ ಅಂಚಿನಲ್ಲಿರುವ ನೌಕರರನ್ನು ಮಾತ್ರವಲ್ಲದೆ, ಪ್ರೊಬೇಷನರಿ , ಟ್ರೈನಿ ನೌಕರರನ್ನು ಸೇವೆಯಿಂದ ಬಿಡುಗಡೆಗೊಳಿಸಿದ್ದಾರೆ. ಅರವತ್ತು ಸಾವಿರಕ್ಕೂ ಹೆಚ್ಚು ಕಾರ್ಮಿಕರಿಗೆ ಆಪಾದನಾ ಪತ್ರ ನೀಡಿ ಶಿಸ್ತು ಪ್ರಕ್ರಿಯೆಗೆ ಮುಂದಾಗಿದ್ದಾರೆ.
ಕಾರ್ಮಿಕ ವಿರೋಧಿ ಕ್ರಮಗಳಿಂದಾಗಿ ಸಾವಿರಾರು ಕಾರ್ಮಿಕರು ತೀವ್ರ ಸಂಕಷ್ಟಕ್ಕೆ ಒಳಗಾಗಿದ್ದಾರೆ. ಕೊರೊನಾ ಸಾಂಕ್ರಾಮಿಕ ರೋಗಕ್ಕೆ ತುತ್ತಾಗಿ ಮೃತಪಟ್ಟವರಿಗೆ ಸರ್ಕಾರದಿಂದ ಯಾವುದೇ ಪರಿಹಾರ ನೀಡಿಲ್ಲ. ಈ ಹಿನ್ನೆಲೆಯಲ್ಲಿ ಸರ್ಕಾರ ಮಧ್ಯಪ್ರವೇಶಿಸಿ ಸಮಸ್ಯೆಗಳನ್ನು ಬಗೆಹರಿಸುವಂತೆ ಒತ್ತಾಯಿಸಿ ಧರಣಿ ಸತ್ಯಾಗ್ರಹಕ್ಕೆ ಮುಂದಾಗಿದ್ದೇವೆ ಎಂದು ಹೇಳಿದರು.
ಜುಲೈ 29 ರಂದು ಬೆಳಗ್ಗೆ 11 ಗಂಟೆಗೆ ಫ್ರೀಡಂ ಪಾರ್ಕ್ನಲ್ಲಿ ಧರಣಿ ನಡೆಸಿ ಸೇವೆಯಿಂದ ವಜಾಗೊಂಡ ಟೈನಿ ಮತ್ತು ಪ್ರೊಬೇಷನರಿ ಸೇರಿದಂತೆ ಎಲ್ಲಾ ಕಾರ್ಮಿಕರ ಪುನರ್ನೇಮಕ, ದೂರದ ಘಟಕಗಳಿಗೆ ವರ್ಗಾವಣೆ ಗೊಂಡವರನ್ನು ವಾಪಸ್ಸು ಪಡೆಯುವುದು, ಕಾರ್ಮಿಕ ಸಂಘಗಳೊಂದಿಗೆ ಚರ್ಚಿಸಿ ವೇತನ ಪರಿಷ್ಕರಣೆ ಸೇರಿ ಉತ್ತಮ ಬಾಂಧವ್ಯ ವೃದ್ಧಿಸಲು ಕಾರ್ಮಿಕ ಸ್ನೇಹಿ ಆಡಳಿತ ಜಾರಿಗೆ ತರುವಂತೆ ಒತ್ತಾಯಿಸಲಾಗುತ್ತದೆ ಎಂದರು.
ನೌಕರರ ಫೆಡರೇಷನ್ನ ಉಪಾಧ್ಯಕ್ಷರಾದ ಕೆ.ಪ್ರಕಾಶ್, ಚಂದ್ರಪ್ಪ, ಪ್ರಧಾನಕಾರ್ಯದರ್ಶಿ ಎಚ್.ಎಸ್.ಮಂಜುನಾಥ್, ಜಂಟಿ ಕಾರ್ಯದರ್ಶಿಗಳಾದ ಆರ್.ವೇಣುಗೋಪಾಲ್, ಎಂ.ಎಸ್.ಸುರೇಶ್ ಪತ್ರಿಕಾಗೋಷ್ಠಿಯಲ್ಲಿದ್ದರು.