Home / ಜಿಲ್ಲೆ / ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

ಬೆಳಗಾವಿ : ಬಂದ್ ಗೆ ಹಲವು ಸಂಘಟನೆಗಳು ಬೆಂಬಲ

Spread the love

ಬೆಳಗಾವಿ: ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರು ಹಾಗೂ ಕಾರ್ಮಿಕರ ವಿರೋಧಿ ನೀತಿ ಅನುಸರಿಸುತ್ತಿವೆ’ ಎಂದು ಆರೋಪಿಸಿ ರೈತ, ದಲಿತ ಮತ್ತು ಕಾರ್ಮಿಕರ ಐಕ್ಯ ಹೋರಾಟ ಸಮಿತಿ ಕರೆ ನೀಡಿರುವ ಸೆ. 28ರ ರಾಜ್ಯ ಬಂದ್‌ಗೆ ಇಲ್ಲಿನ ಕನ್ನಡ, ದಲಿತ ಮತ್ತು ರೈತ ಪರ ಸಂಘಟನೆಗಳು ಬೆಂಬಲ ಸೂಚಿಸಿವೆ.

ನಗರದ ಕನ್ನಡ ಸಾಹಿತ್ಯ ಭವನದಲ್ಲಿ ಸಭೆ ನಡೆಸಿದ ಬಳಿಕ ಪತ್ರಿಕಾಗೋಷ್ಠಿ ನಡೆಸಿದ ಪದಾಧಿಕಾರಿಗಳು ಬಂದ್‌ಗೆ ಬೆಂಬಲ ವ್ಯಕ್ತಪಡಿಸಿ ಭಾಗವಹಿಸುವುದಾಗಿ ತಿಳಿಸಿದರು.

ಮೆರವಣಿಗೆ:

ಕರವೇ ಜಿಲ್ಲಾ ಘಟಕದ ಅಧ್ಯಕ್ಷ ದೀಪಕ ಗುಡಗನಟ್ಟಿ ಮಾತನಾಡಿ, ‘ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ರೈತರ ಮರಣ ಶಾಸನ ಬರೆಯಲು ಹೊರಟಿವೆ. ಇದಕ್ಕೆ ಅವಕಾಶ ಕೊಡಬಾರದು. ರೈತ ವಿರೋಧಿ ನೀತಿಯನ್ನು ಕೂಡಲೇ ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಸೋಮವಾರ ರಾಣಿ ಚನ್ನಮ್ಮ ವೃತ್ತದಿಂದ ಸುವರ್ಣ ವಿಧಾನಸೌಧದವರೆಗೆ ಬೃಹತ್‌ ಪ್ರತಿಭಟನಾ ಮೆರವಣಿಗೆ ನಡೆಸುತ್ತೇವೆ’ ಎಂದು ಹೇಳಿದರು

ಅನ್ನದಾತ ಸಂಕಷ್ಟದಲ್ಲಿದ್ದಾನೆ. ಹೀಗಿರುವಾಗ ಕೃಷಿ ವಲಯಕ್ಕೆ ಮಾರಕವಾದ ಕಾನೂನುಗಳನ್ನು ಜಾರಿಗೆ ತರಲು ಹೊರಟಿರುವುದು ಸರಿಯಲ್ಲ. ಕೃಷಿಕರ ಬೆಂಬಲಕ್ಕೆ ಎಲ್ಲರೂ ನಿಲ್ಲಬೇಕು. ಹೋಟೆಲ್‌ ಮಾಲೀಕರು, ಅಂಗಡಿಕಾರರು ವಹಿವಾಟು ಬಂದ್‌ ಮಾಡಿ ಬೆಂಬಲ ಸೂಚಿಸಬೇಕು. ಆಟೊ ರಿಕ್ಷಾ ಚಾಲಕರು ಕೂಡ ಸಹಕರಿಸಬೇಕು’ ಎಂದು ಕೋರಿದರು.

ಎಲ್ಲರೂ ಬೆಂಬಲಿಸಬೇಕು:

‘ಪ್ರಜಾಪ್ರಭುತ್ವ ಹಾಗೂ ಸಂವಿಧಾನ ವಿರೋಧಿ ಸುಗ್ರೀವಾಜ್ಞೆ- ಮಸೂದೆಗಳನ್ನು ಕೂಡಲೇ ಹಿಂಪಡೆಯಬೇಕು. ರೈತರ ಮೇಲೆ ಬಲವಂತವಾಗಿ ಹೇರಬಾರದು. ರೈತ ವಿರೋಧಿ ನೀತಿ ಖಂಡಿಸಿ ನಡೆಯುತ್ತಿರುವ ಹೋರಾಟಕ್ಕೆ ಎಲ್ಲ ವರ್ಗದವರೂ ಬೆಂಬಲ ನೀಡಬೇಕು. ಶಾಂತಿಯುತ ಪ್ರತಿಭಟನೆಯಲ್ಲಿ ಭಾಗಿಯಾಗಬೇಕು’ ಎಂದು ರಾಜ್ಯ ರೈತ ಸಂಘದ ಸಂಚಾಲಕ ಚೂನಪ್ಪ ಪೂಜಾರಿ ಮನವಿ ಮಾಡಿದರು.

ರೈತ ಸಂಘ ಸಂಚಾಲಕಿ ಜಯಶ್ರೀ ಗುರಣ್ಣವರ, ಜಿಲ್ಲಾ ಘಟಕದ ಅಧ್ಯಕ್ಷ ರಾಘವೇಂದ್ರ ನಾಯ್ಕ, ಮುಖಂಡರಾದ ಪ್ರಕಾಶ ನಾಯಕ, ಭಗನ ಮಲೆ, ಕರವೇ ವಿವಿಧ ಬಣಗಳ ಮುಖಂಡರಾದ ಮಹಾದೇವ ತಳವಾರ, ಮಹಾಂತೇಶ ರಣಗಟ್ಟಿಮಠ, ಅಭಿಲಾಷ ಇದ್ದರು.

ನಂತರ ರಾಣಿ ಚನ್ನಮ್ಮ ವೃತ್ತದಲ್ಲಿ ಪ್ರತಿಭಟನೆ ನಡೆಸಿದರು.

‘ಬಂದ್‌ಗೆ ನಮ್ಮ ಬೆಂಬಲವಿದೆ’ ಎಂದು ರಾಷ್ಟ್ರವಾದಿ ಕಾಂಗ್ರೆಸ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ರಾಜು ಪಾಟೀಲ ತಿಳಿಸಿದ್ದಾರೆ.

***

ಮೆರವಣಿಗೆ ವೇಳೆ ಬಸ್ ಸಂಚಾರ ಸ್ಥಗಿತ

‘ಸೆ. 28ರಂದು ಬೆಳಿಗ್ಗೆ ಎಂದಿನಂತೆ ಬಸ್‌ಗಳು ಸಂಚರಿಸಲಿವೆ. ಪ್ರತಿಭಟನಾ ಮೆರವಣಿಗೆ ಸಂದರ್ಭದಲ್ಲಿ ಬಸ್‌ಗಳ ಕಾರ್ಯಾಚರಣೆ ಸ್ಥಗಿತಗೊಳಿಸಲಾಗುವುದು’ ಎಂದು ಎನ್‌ಡಬ್ಲ್ಯುಕೆಎಸ್‌ಆರ್‌ಟಿಸಿ ವಿಭಾಗೀಯ ನಿಯಂತ್ರಣಾಧಿಕಾರಿ ಎಂ.ಆರ್. ಮುಂಜಿ ‘ಪ್ರಜಾವಾಣಿ’ಗೆ ತಿಳಿಸಿದರು.

***

‘ತೊಂದರೆ ನೀಡಿದರೆ ಕಾನೂನು ಕ್ರಮ’

‘ಬಂದ್ ಸಂದರ್ಭದಲ್ಲಿ ಸಾರ್ವಜನಿಕ ಅಸ್ತಿಪಾಸ್ತಿಗೆ ಹಾನಿ ಮಾಡುವಂತಿಲ್ಲ. ವಾಹನಗಳ ಸಂಚಾರ ಬಂದ್ ಮಾಡುವಂತಿಲ್ಲ. ಇದನ್ನು ಉಲ್ಲಂಘಿಸಿದರೆ ಕಾನೂನು ಕ್ರಮ ಕೈಗೊಳ್ಳಲಾಗುವುದು. ಅಂತರ ಕಾಯ್ದುಕೊಳ್ಳುವುದು ಸೇರಿದಂತೆ ಕೋವಿಡ್-19 ಮಾರ್ಗಸೂಚಿಗಳನ್ನು ಉಲ್ಲಂಘಿಸದಂತೆ ಶಾತಿಯುತವಾಗಿ ಮನವಿ ಸಲ್ಲಿಸುವುದಕ್ಕೆ ಅವಕಾಶವಿದೆ’ ಎಂದು ಎಸ್ಪಿ ಲಕ್ಷ್ಮಣ ನಿಂಬರಗಿ ತಿಳಿಸಿದ್ದಾರೆ.

‘ಜಿಲ್ಲೆಯಾದ್ಯಂತ 4ಸಾವಿರಕ್ಕೂ ಹೆಚ್ಚು ಸಿಸಿಟಿವಿ ಕ್ಯಾಮೆರಾ ಇವೆ. ಪ್ರಮುಖ ಸ್ಥಳಗಳಲ್ಲಿ ಡ್ರೋನ್‌ ಬಳಸಲಾಗುವುದು. ಬಲವಂತವಾಗಿ ಅಂಗಡಿಗಳನ್ನು ಮುಚ್ಚಿಸಲು ಮುಂದಾಗಬಾರದು. ಕಾನೂನು ಕೈಗೆತ್ತಿಕೊಂಡರೆ ಕಟ್ಟುನಿಟ್ಟಿನ ಕ್ರಮ ವಹಿಸಲಾಗುವುದು. ಮುಂಜಾಗ್ರತಾ ಕ್ರಮವಾಗಿ ಪೊಲೀಸ್ ಬಂದೋಬಸ್ತ್ ಮಾಡಲಾಗಿದೆ’ ಎಂದು ವಿಡಿಯೊ ಹೇಳಿಕೆಯಲ್ಲಿ ಮಾಹಿತಿ ನೀಡಿದ್ದಾರೆ.


Spread the love

About Laxminews 24x7

Check Also

ಅಥಣಿಯ ಇಬ್ಬರು ವಿದ್ಯಾರ್ಥಿನಿಯರಿಗೆ ತೃತೀಯ ರ್‍ಯಾಂಕ್‌

Spread the love ಬೆಳಗಾವಿ: ಜಿಲ್ಲೆಯ ಅಥಣಿಯ ಬಣಜವಾಡ ವಸತಿ ಪದವಿಪೂರ್ವ ಕಾಲೇಜಿನ ಇಬ್ಬರು ವಿದ್ಯಾರ್ಥಿನಿಯರು ವಿಜ್ಞಾನ ಹಾಗೂ ವಾಣಿಜ್ಯ ವಿಭಾಗದಲ್ಲಿ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ