ಬೆಂಗಳೂರು: ಲಾಕ್ಡೌನ್ ಸಡಿಲಿಕೆಯ ನಂತರ ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೊರೊನಾ ತನ್ನ ಆರ್ಭಟವನ್ನು ಹೆಚ್ಚಿಸಿದೆ. ದಿನೇ ದಿನೇ ಕೊರೊನಾದಿಂದ ಜನರು ಸಾವನ್ನಪ್ಪುತ್ತಿದ್ದಾರೆ.
ಬೆಂಗಳೂರು ನಗರದಲ್ಲಿ ಲಾಕ್ಡೌನ್ ನಂತರ ಕೋವಿಡ್ ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಇಂದು ಸಚಿವರು ಹಾಗೂ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಚರ್ಚಿಸಲಾಯಿತು. ಮುಂದೆ ಕೊರೊನಾ ತಡೆಗೆ ಏನೂ ಮಾಡಬೇಕು ಎಂದು ಈ ಸಭೆಯಲ್ಲಿ ತೀರ್ಮಾನ ಮಾಡಲಾಗಿದೆ.
ಸಭೆಯ ಮುಖ್ಯಾಂಶಗಳು
1. ಬೆಂಗಳೂರು ಹಾಗೂ ಸುತ್ತಮುತ್ತಲಿನ ಜಿಲ್ಲೆಗಳಲ್ಲಿ ಕೋವಿಡ್-19 ನಿಯಂತ್ರಣಕ್ಕೆ ಸಂಬಂಧಿಸಿದಂತೆ ವಿಶೇಷ ಕಾರ್ಯಪಡೆ ರಚನೆ ಮಾಡಲಾಗಿದೆ.
2. ಬೆಂಗಳೂರಿನಲ್ಲಿ ಒಟ್ಟು 697 ಪ್ರಕರಣಗಳು ವರದಿಯಾಗಿವೆ. 330 ಸಕ್ರಿಯ ಪ್ರಕರಣಗಳಿದ್ದು, 6 ಜನ ಐಸಿಯುನಲ್ಲಿದ್ದಾರೆ.
3. ಈ ಹಿನ್ನೆಲೆಯಲ್ಲಿ ಕೆಲವು ಕ್ರಮಗಳನ್ನು ಕೈಗೊಳ್ಳುವ ಬಗ್ಗೆ ತೀರ್ಮಾನಿಸಲಾಯಿತು.
4. ಗುರುವಾರ ಮಾಸ್ಕ್ ಡೇ ಆಚರಿಸಲಾಗುವುದು. ವಿಧಾನಸೌಧದಿಂದ ಬೆಳಿಗ್ಗೆ 8.30 ಗಂಟೆಗೆ ಮಾಸ್ಕ್ ಧರಿಸಿ 1 ಕಿ.ಮೀ. ವಾಕ್ ಮಾಡಲಾಗುವುದು.
5. ರಾಜ್ಯಾದ್ಯಂತ, ಪಂಚಾಯತ್ ಮಟ್ಟದಲ್ಲಿಯೂ ಇದನ್ನು ಆಚರಿಸಲಾಗುವುದು.
6. ಮಹಾರಾಷ್ಟ್ರದಿಂದ ಬರುವವರಿಗೆ ಏಳು ದಿನ ಕ್ವಾರಂಟೈನ್, ಚೆನ್ನೈ, ದೆಹಲಿಯಿಂದ ಬರುವವರಿಗೆ ಮೂರು ದಿನ ಕ್ವಾರಂಟೈನ್ ಮಾಡಲು ನಿರ್ಧಾರ
7. ಮಾಸ್ಕ್ ಧರಿಸದ ವ್ಯಕ್ತಿಗಳು, ಸಾಮಾಜಿಕ ಅಂತರ ಕಾಯ್ದುಕೊಳ್ಳದ ವ್ಯಕ್ತಿಗಳ ವಿರುದ್ಧ ಕಟ್ಟು ನಿಟ್ಟಿನ ಕ್ರಮ ಕೈಗೊಳ್ಳಲಾಗುವುದು. ಹಾಗೂ 200 ರೂ. ದಂಡ ವಿಧಿಸಲಾಗುವುದು.
8. 8000 ಬೂತ್ ಮಟ್ಟದಲ್ಲಿ ಟಾಸ್ಕ್ ಫೋರ್ಸ್ ರಚಿಸಿ, ವಿವಿಧ ಕಾಯಿಲೆಗಳಿಂದ ಬಳಲುತ್ತಿರುವ ವ್ಯಕ್ತಿಗಳ ಪತ್ತೆ ಹಚ್ಚುವುದು. ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವುದು, ಹೋಂ ಕ್ವಾರಂಟೈನ್ ಪಾಲನೆಯನ್ನು ಖಾತರಿ ಪಡಿಸುವ ಬಗ್ಗೆ ಕ್ರಮ ವಹಿಸಲಾಗುವುದು.
9. ರಾಜ್ಯದಲ್ಲಿ ಒಟ್ಟು 2956 ಸಕ್ರಿಯ ಪ್ರಕರಣಗಳು ಇದ್ದು, 93 ಶೇಕಡಾ ಜನರಿಗೆ ರೋಗ ಲಕ್ಷಣ ಇಲ್ಲ. 200 ಜನರಿಗೆ ಮಾತ್ರ ರೋಗ ಲಕ್ಷಣ ಇದೆ.
10. ಪರೀಕ್ಷಾ ಪ್ರಮಾಣ ಹೆಚ್ಚಿಸಲು ಕ್ರಮ ಕೈಗೊಳ್ಳಲಾಗುತ್ತಿದೆ.
11. ರಾಜ್ಯದಲ್ಲಿ 10 ಲಕ್ಷ ಜನಸಂಖ್ಯೆಗೆ 7100 ಪರೀಕ್ಷೆ ನಡೆಸಲಾಗಿದೆ. ಐಸಿಎಂಆರ್ ಮಾರ್ಗಸೂಚಿಗಳಿಗಿಂತ ಹೆಚ್ಚು ಪರೀಕ್ಷೆ ನಡೆಸಲಾಗಿದೆ.
12. ಚಿಕಿತ್ಸೆಯ ವಿಧಿ ವಿಧಾನ ಹಾಗೂ ಚಿಕಿತ್ಸೆ ದರ ನಿಗದಿ ಕುರಿತು ಸಭೆಯಲ್ಲಿ ಚರ್ಚಿಸಲಾಯಿತು. ಈ ಕುರಿತು ಶೀಘ್ರವೇ ಮಾರ್ಗಸೂಚಿ ಹೊರಡಿಸಲಾಗುವುದು.
13. ಪ್ರಕರಣ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಜನತೆ ಆತಂಕ ಪಡಬೇಕಾಗಿಲ್ಲ. ಆದರೆ ಮಾಸ್ಕ್ ಧಾರಣೆ ಮತ್ತು ಸಾಮಾಜಿಕ ಅಂತರ ಮತ್ತು ವೈಯಕ್ತಿಕ ಸ್ವಚ್ಛತೆಯಂತಹ ಮುನ್ನೆಚ್ಚರಿಕೆ ಕ್ರಮಗಳನ್ನು ಮರೆಯದೆ ತೆಗೆದುಕೊಳ್ಳಬೇಕು.