ಬೆಂಗಳೂರು, ಏ.9-ರಾಜ್ಯದಲ್ಲಿ ಇನ್ನು ಹದಿನೈದು ದಿನಗಳ ಕಾಲ ಲಾಕ್ಡೌನ್ ವಿಸ್ತರಣೆಗೆ ಎಲ್ಲ ಸಚಿವರು ಸಲಹೆ ಮಾಡಿದ್ದು,ನಾಳೆ ಪ್ರಧಾನಿ ಜೊತೆ ಚರ್ಚಿಸಿದ ಬಳಿಕ ಮುಂದಿನ ತೀರ್ಮಾನ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.
ಸಚಿವ ಸಂಪುಟ ಸಭೆ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ಏ.14ರ ನಂತರ ಲಾಕ್ಡೌನ್ ವಿಸ್ತರಿಸಲು ಸಂಪುಟದ ಎಲ್ಲ ಸದಸ್ಯರು ಒತ್ತಾಯ ಮಾಡಿದ್ದು ಪ್ರಧಾನಿ ನರೇಂದ್ರ ಮೋದಿ ಅವರೊಂದಿಗೆ ನಾಳೆ ಚರ್ಚಿಸಿದ ಬಳಿಕ ತೀರ್ಮಾನಿಸಲಾಗುವುದು ಎಂದರು.
ಲಾಕ್ಡೌನ್ ಸಂದರ್ಭದಲ್ಲಿ ಜನತೆ ಮನೆಯಿಂದ ಹೊರ ಬಾರದೆ ಸಹಕರಿಸಬೇಕು. ಲಾಕ್ಡೌನ್ ಉಲ್ಲಂಘಿಸುವವರ ವಿರುದ್ಧ ಸರ್ಕಾರದಿಂದ ಕಠಿಣ ಕ್ರಮ ಕೈಗೊಳ್ಳಲಾಗುವುದು. ಬೆಂಗಳೂರಿನಲ್ಲಿ ಲಾಕ್ಡೌನ್ ಉಲ್ಲಂಘಿಸಿದವರ ಸುಮಾರು 10 ಸಾವಿರ ವಾಹನಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ. ಕ್ರಿಮಿನಲ್ ಕೇಸು ದಾಖಲಿಸಲಾಗಿದೆ.
ಜನತೆ ಪರಿಸ್ಥಿತಿಯನ್ನು ಅರ್ಥ ಮಾಡಿಕೊಳ್ಳಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ಮತ್ತಷ್ಟು ಕಠಿಣ ತೀರ್ಮಾನ ಕೈಗೊಳ್ಳುವುದು ಅನಿವಾರ್ಯವಾಗಲಿದೆ ಎಂದು ಅವರು ಎಚ್ಚರಿಸಿದರು. ಸಂಕಷ್ಟದಲ್ಲಿರುವ ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವ ಸಂಬಂಧ ಸಮೀಕ್ಷೆ ನಡೆಸಲು, ರಾಜ್ಯದ ಎಲ್ಲ ಜಿಲ್ಲಾಧಿಕಾರಿಗಳ ಜತೆ ಚರ್ಚೆ ಮಾಡಲಾಗಿದೆ.
ಬಿತ್ತನೆ ಬೀಜ, ರಸಗೊಬ್ಬರ ಕೊರತೆಯಾಗದಂತೆ ಎಚ್ಚರ ವಹಿಸಲಾಗಿದೆ. ಮಳೆ ಆರಂಭವಾಗಿರುವುದರಿಂದ ರೈತರಿಗೆ ಯಾವುದೇ ತೊಂದರೆಯಾಗದಂತೆ ಕ್ರಮ ಕೈಗೊಳ್ಳಲಾಗುವುದು. ಹೂವು ಬೆಳೆಗಾರರಿಗೆ ಸೂಕ್ತ ಪರಿಹಾರ ನೀಡುವುದಾಗಿ ಯಡಿಯೂರಪ್ಪ ಸ್ಪಷ್ಟಪಡಿಸಿದರು.
ಕಾನೂನು ಮತ್ತು ವ್ಯವಹಾರಗಳ ಸಚಿವ ಮಾಧುಸ್ವಾಮಿ ಮಾತನಾಡಿ, ಶಾಸಕರು, ಸಚಿವರ ಭತ್ಯೆಯಲ್ಲಿಶೇಕಡಾ 30ರಷ್ಟು ಕಡಿತಗೊಳಿಸಿ 15.36 ಕೋಟಿಯಷ್ಟು ಹಣವನ್ನು ಕೋವಿಡ್ ಪರಿಹಾರ ನಿಧಿಗೆ ವರ್ಗಾಯಿಸಲು ಸುಗ್ರೀವಾಜ್ಞೆ ತರಲು ಸಚಿವ ಸಂಪುಟ ಒಪ್ಪಿಗೆ ಸೂಚಿಸಿದೆ ಎಂದರು.
ಜಿಎಸ್ ಟಿ ತೆರಿಗೆ ಪಾವತಿಗೆ ಜೂನ್ ತಿಂಗಳವರೆಗೆ ಕಾಲಾವಕಾಶ ನೀಡಲು ಸುಗ್ರೀವಾಜ್ಞೆ ತರಲಾಗುವುದು. ಕುಡಿಯುವ ನೀರಿಗಾಗಿ 49 ಬರಪೀಡಿತ ತಾಲೂಕುಗಳಿಗೆ ತಲಾ 1ಕೋಟಿ ಹಾಗೂ ಉಳಿತ ತಾಲೂಕುಗಳಿಗೆ 50 ಲಕ್ಷ ರೂ ಬಿಡುಗಡೆ ಸೇರಿದಂತೆ ಇನ್ನು ಕೆಲವು ಮಹತ್ತರ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ ಎಂದು ಹೇಳಿದರು.
ನಮೂನೆ, 53, 94 ಎ ಅಡಿ ಬಗರ್ ಹುಕ್ಕುಂ ಭೂಮಿ ಸಾಗುವಳಿಗೆ ಸಲ್ಲಿಸಿರುವ ಅರ್ಜಿ ಇತ್ಯರ್ಥ ಆಗುವ ತನಕ ಪ್ರಕರಣ ದಾಖಲಿಸದಿರಲು ಸಂಪುಟ ತೀರ್ಮಾನಿಸಿರುವುದಾಗಿ ಹೇಳಿದರು. ಭೂಕಬಳಿಕೆ ಪ್ರಕರಣವನ್ನು ವಿಚಾರಣೆ ನಡೆಸುವ ಅಧಿಕಾರವನ್ನು ಸಿವಿಲ್ ನ್ಯಾಯಾಲಯದಿಂದ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ ಮಾಡಲು ಸುಗ್ರೀವಾಜ್ಞೆ ತರಲು ತೀರ್ಮಾನಿಸಲಾಗಿದೆ ಎಂದರು.