ರೈತರ ಪರ ಕೆಲಸ ಮಾಡಲು ಪಕ್ಷಾತೀತವಾಗಿ ಸಹಕರಿಸಿ: ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ
ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧ/ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ/ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವ ರಮೇಶ ಜಾರಕಿಹೊಳಿ
- ಗ್ರಾಮೀಣ ಪ್ರದೇಶಗಳಲ್ಲಿ ನೀರಾವರಿ ಮಾಡುವ ಕನಸು ಅನೇಕ ವರ್ಷಗಳ ಹಿಂದಿನದು. ಶಾಸಕನಾದಾಗಿನಿಂದಲೂ ನೀರಾವರಿಗೆ ಆದ್ಯತೆ ನೀಡಿರುತ್ತೇನೆ. ಮುಂದಿನ 3 ವರ್ಷಗಳ ಕಾಲ ಇನ್ನೂ ಹೆಚ್ಚಿನ ಕ್ಷೇತ್ರಕ್ಕೆ ನೀರಾವರಿ ಸೌಲಭ್ಯ ಕಲ್ಪಿಸಲಾಗುವುದು. ಜಿಲ್ಲೆಯಲ್ಲಿ ಎಷ್ಟು ಸಾಧ್ಯವೋ ಅಷ್ಟು ಬ್ಯಾರೇಜ್ ನಿರ್ಮಾಣಕ್ಕೆ ಯೋಜನೆ ರೂಪಿಸುವಂತೆ ಈಗಾಗಲೇ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.ಆದ್ದರಿಂದ ರೈತಪರ ಕೆಲಸ ಮಾಡಲು ಎಲ್ಲರೂ ಪಕ್ಷಾತೀತವಾಗಿ ಸಹಕಾರ ನೀಡಬೇಕೆಂದು ಜಲಸಂಪನ್ಮೂಲ ಖಾತೆ ಸಚಿವ ರಮೇಶ ಜಾರಕಿಹೊಳಿ ಹೇಳಿದರು.
ಜಲ ಸಂಪನ್ಮೂಲ ಇಲಾಖೆ ಹಾಗೂ ನೀರಾವರಿ ನಿಗಮ ನಿಯಮಿತ ವತಿಯಿಂದ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲ್ಲೂಕಿನ ಜಲಾಲಪೂರ (ಹಳೆ ದಿಗ್ಗೆವಾಡಿ) – ಚಿಕ್ಕೋಡಿ ತಾಲ್ಲೂಕಿನ ಇಂಗಳಿ ಗ್ರಾಮಗಳ ಮಧ್ಯದಲ್ಲಿ ಕೃಷ್ಣಾ ನದಿಗೆ ಅಡ್ಡಲಾಗಿ ಬ್ರಿಡ್ಜ್ ಕಂ ಬ್ಯಾರೆಜ್ ನಿರ್ಮಾಣಕ್ಕೆ ಶನಿವಾರ ದಿಗ್ಗೆವಾಡಿಯಲ್ಲಿ ಶಂಕು ಸ್ಥಾಪನೆ ನೆರವೇರಿಸಿ ಮಾತನಾಡಿದ ಸಚಿವರು ರಾಜ್ಯದ ಮೂಲೆ ಮೂಲೆಗೂ ನೀರಾವರಿ ಸೌಲಭ್ಯ ಒದಗಿಸಲು ಸರ್ಕಾರ ಬದ್ಧವಿದೆ. ಅದೇ ರೀತಿ ಬೆಳಗಾವಿ ಜಿಲ್ಲೆಯಲ್ಲಿ ಕೃಷ್ಣಾ ಮತ್ತು ಅದರ ಉಪ ನದಿಗಳಿಗೆ ಎಷ್ಟು ಸಾಧ್ಯವೋ ಅಷ್ಟು ಗರಿಷ್ಠ ಪ್ರಮಾಣದಲ್ಲಿ ಬ್ಯಾರೇಜ್ ನಿರ್ಮಿಸಲಾಗುವುದು ಎಲ್ಲ ರೈತರು ಮತ್ತು ಜನರಿಗೆ ನೀರು ನೀಡುವುದು ನಮ್ಮ ಕೆಲಸ. ಕೃಷ್ಣಾ ಮತ್ಪ ನದಿಗಳಿಗೆ ಹೆಚ್ಚಿನ ಸಂಖ್ಯೆಯಲ್ಲಿ ಬ್ಯಾರೇಜ್ ನಿರ್ಮಿಸಲು ಎಷ್ಟೇ ಖರ್ಚಾದರೂ ನೀಡಲು ಸಿದ್ಧ . ಜಿಲ್ಲೆಗೆ ಸಂಬಂಧಿಸಿದಂತೆ ಈಗಾಗಲೇ 2 ಸಭೆಗಳನ್ನು ಮಾಡಿ ಜಿಲ್ಲೆಯ ಎಲ್ಲ ಹದಿನೆಂಟು ಕ್ಷೇತ್ರಗಳಲ್ಲಿ ನೀರಾವರಿ ಸೌಲಭ್ಯ ಕಲ್ಪಿಸಬೇಕು ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ ಎಂದರು.
ಆಲಮಟ್ಟಿ ಎತ್ತರ ಹೆಚ್ಚಿಸಲು ಹಾಗೂ ಪುನರ್ವಸತಿ ಗೆ ಸಾವಿರಾರು ಕೋಟಿ ಅಗತ್ಯವಿದ್ದು, ಹಂತ ಹಂತವಾಗಿ ಅನುಷ್ಠಾನಗೊಳಿಸಲಾಗುತ್ತದೆ. ಚಿಕ್ಕೋಡಿ ಲೋಕಸಭಾ ಕ್ಷೇತ್ರದಲ್ಲಿ ನೀರಾವರಿ ಯೋಜನೆ ಪೂರ್ಣಗೊಳಿಸಲು ಡಾ.ಪ್ರಭಾಕರ್ ಕೋರೆ ನೇತೃತ್ವದಲ್ಲಿ ತಂಡವಾಗಿ ಕೆಲಸ ಮಾಡುವುದಾಗಿ ಸಚಿವ ರಮೇಶ ಜಾರಕಿಹೊಳಿ ಭರವಸೆ ನೀಡಿದರು.
ರಾಜ್ಯಸಭಾ ಸದಸ್ಯ ಡಾ.ಪ್ರಭಾಕರ್ ಕೋರೆ,ರಾಯಬಾಗ ಶಾಸಕ ದುರ್ಯೋಧನ ಐಹೊಳೆ, ಕರ್ನಾಟಕ ನೀರಾವರಿ ನಿಗಮದ (ಉತ್ತರ ವಲಯ) ಮುಖ್ಯ ಎಂಜಿನಿಯರ್ ಅರವಿಂದ ಕಣಗಿಲ್, ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.