ಬೆಳಗಾವಿ: ಲಾಕ್ ಡೌನ್ ನಿಂದಾಗಿ ಎಲ್ಲ ಹೋಟೆಲ್ ಗಳು ಬಂದ್ ಆಗಿವೆ, ಹೀಗಾಗಿ ಉಮೇಶ ಕತ್ತಿ ನಿವಾಸದಲ್ಲಿ ಶಾಸಕರು ಊಟಕ್ಕೆ ಸೇರಿದ್ರು. ಬಿಜೆಪಿಯಲ್ಲಿ ಯಾವುದೇ ಭಿನ್ನಾಭಿಪ್ರಾಯವಿಲ್ಲ ಅಂತಾ ಜಲಸಂಪನ್ಮೂಲ ಸಚಿವ ರಮೇಶ ಜಾರಕಿಹೊಳಿ ಹೇಳಿದ್ದಾರೆ.
ಜಿಲ್ಲಾ ಉಸ್ತುವಾರಿ ಸಚಿವರಾಗಿ ಮೊದಲ ಬಾರಿಗೆ ಬೆಳಗಾವಿಗೆ ಆಗಮಿಸಿದ್ದು, ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಸಭೆ ನಡೆಸಿದ ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದರು.
ರಾಜ್ಯ ಸಭೆ ಟಿಕೆಟ್ ಹಂಚಿಕೆ ವಿಚಾರವಾಗಿ ನಮ್ಮ ಅಭಿಪ್ರಾಯಗಳನ್ನು ಹೈಕಮಾಂಡ್ ಗೆ ತಿಳಿಸಿದ್ದೇವೆ. ಅದನ್ನು ಬಹಿರಂಗ ಪಡಿಸಲಾಗುವುದಿಲ್ಲ. ಟಿಕೆಟ್ ಯಾರಿಗೆ ನೀಡಬೇಕು ಎಂಬುವುದನ್ನು ಪಕ್ಷ ನಿರ್ಧರಿಸತ್ತೆ. ಹೈಕಮಾಂಡ್ ಯಾರನ್ನು ಆಯ್ಕೆ ಮಾಡುತ್ತೆ ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದರು.
ಈ ಹಿಂದೆ ಜಗದೀಶ್ ಶೆಟ್ಟರ್ ಜಿಲ್ಲಾ ಉಸ್ತುವಾರಿ ಸಚಿವರಾಗಿದ್ರು, ಆಗಲೂ ನಾನೇ ಜಿಲ್ಲಾ ಉಸ್ತುವಾರಿ ಸಚಿವನಂತೆಯೇ ಇದ್ದೆ. ಸದ್ಯ ಮೂರನೇ ಬಾರಿ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವನಾಗಿದ್ದೇನೆ, ಒಳ್ಳೆಯ ಸಲಹೆ ಸೂಚನೆ ಯಾರೇ ನೀಡಿದರೂ ಸ್ವೀಕರಿಸುತ್ತೇನೆ. ಪಕ್ಷಾತೀತವಾಗಿ ಎಲ್ಲರನ್ನೂ ಕರೆದುಕೊಂಡು ಹೋಗುತ್ತೇನೆ ಎಂದು ಹೇಳಿದ್ರು.
ಪ್ರವಾಹ ವೇಳೆ ಸರ್ಕಾರ, ಜಿಲ್ಲಾಡಳಿತ ಮಾಡಿದ ತಪ್ಪನ್ನು ಸರಿಪಡಿಸುವೆ. ನೇಕಾರರ ಸಮಸ್ಯೆ ಬಗ್ಗೆ ಮುಖ್ಯಮಂತ್ರಿಗಳ ಜೊತೆ ಚರ್ಚೆ ನಡೆಸುತ್ತೇನೆ ಎಂದು ತಿಳಿಸಿದರು.