ಬೆಂಗಳೂರು: ಇಂದು ಮತ್ತು ನಾಳೆ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಇರುತ್ತದೆ. ದೊಡ್ಡ ಮಟ್ಟದ ಮಳೆ ನೀರಿಕ್ಷೆ ಇಲ್ಲ ಎಂದು ಹವಾಮಾನ ಇಲಾಖೆಯ ನಿರ್ದೇಶಕ ರಮೇಶ್ ಬಾಬು ಹೇಳಿದ್ದಾರೆ.
ಈಗಾಗಲೇ ಚಂಡಮಾರುತ ದುರ್ಬಲಗೊಂಡಿದೆ. ಇವತ್ತು ಅತೀ ಹೆಚ್ಚು ಎಂದರೆ ಮೂರು ಸೆಂಟಿಮೀಟರ್ ಮಳೆಯಾಗಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಸ್ವಲ್ಪ ಮಳೆ ನಿರೀಕ್ಷಿಸಬಹುದು. ಹಾಗಂತ ದೊಡ್ಡ ಪ್ರಮಾಣದಲ್ಲಿ ಮಳೆಯಾಗುವ ಸಾಧ್ಯತೆ ಕಡಿಮೆ ಇದೆ ಎಂದಿದ್ದಾರೆ.
ಚಿಂತಾಮಣಿ, ಕೋಲಾರ, ಶಿಡ್ಲಘಟ್ಟದಲ್ಲಿ ಸ್ವಲ್ಪ ಹೆಚ್ಚು ಮಳೆಯಾಗಿದೆ. ಬೆಂಗಳೂರಲ್ಲಿ ಕೇವಲ 2.5 ಮಿಲಿ ಮೀಟರ್ ಮಳೆಯಾಗಿದೆ. ಇವತ್ತು ಮತ್ತು ನಾಳೆ ಇದೇ ರೀತಿ ಮೋಡ ಕವಿದ ವಾತಾವರಣವೇ ಇರುತ್ತದೆ ಎಂದು ತಿಳಿಸಿದ್ದಾರೆ.
ದಕ್ಷಿಣ ಕರ್ನಾಟಕದಲ್ಲಿ ಅನೇಕ ಭಾಗಗಳಲ್ಲಿ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕರ್ನಾಟಕದ ಹಲವು ಭಾಗಗಳಲ್ಲಿ ಮುಂದಿನ 24 ಗಂಟೆಗಳ ಕಾಲ ಹೆಚ್ಚು ಮಳೆಯಾಗುವ ಎಲ್ಲಾ ಸಾಧ್ಯತೆಗಳಿವೆ. ಕರಾವಳಿ ಕರ್ನಾಟಕ ಮತ್ತು ಉತ್ತರ ಕರ್ನಾಟಕದಲ್ಲಿ ಶುಷ್ಕ ವಾತಾವರಣ ಇರಲಿದೆ ಎಂದು ಹವಾಮಾನ ವರದಿ ತಿಳಿಸಿದೆ.