ಬೆಂಗಳೂರು: ಸಿಎಂ ವಿಚಾರವಾಗಿ ಕಾಂಗ್ರೆಸ್ ಪಕ್ಷದಲ್ಲಿ ಗೊಂದಲವುಂಟಾಗಿದ್ದು, ಈ ವಿಚಾರವಾಗಿ ಅಂತಿಮ ನಿರ್ಧಾರ ಕೈಗೊಳ್ಳುವ ಸಲುವಾಗಿ ಎಐಸಿಸಿ ವರಿಷ್ಠರು ಸಿಎಂ ಸಿದ್ದಾರಮಯ್ಯ ಮತ್ತು ಡಿಕೆಶಿ ಅವರಿಗೆ ದೆಹಲಿಗೆ ಬರುವಂತೆ ಆಹ್ವಾನಿಸಿದ್ದಾರೆ.
ಈ ಹಿನ್ನೆಲೆ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ಇಂದು ಬೆಳಗ್ಗೆ 9.50 ಕ್ಕೆ ದೇವನಹಳ್ಳಿ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಿಂದ ವಿಸ್ತಾರ ವಿಮಾನದಲ್ಲಿ ದೆಹಲಿಗೆ ಪ್ರಯಾಣ ಬೆಳೆಸಲಿದ್ದಾರೆ. ನಿನ್ನೆಯೇ ದೆಹಲಿಗೆ ತರಳಬೇಕಿದ್ದ ಡಿಕೆಶಿ ಅನಾರೋಗ್ಯದ ಹಿನ್ನೆಲೆ ವಿಶ್ರಾಂತಿ ಪಡೆದು ಇಂದು ಬೆಳಗ್ಗೆ ಪ್ರಯಾಣ ಬೆಳೆಸುತ್ತಿದ್ದಾರೆ.
ಎಐಸಿಸಿ ಅಧಿನಾಯಕಿ ಸೋನಿಯಾ ಗಾಂಧಿ ಇಂದು ಶಿಮ್ಲಾದಿಂದ ದೆಹಲಿಗೆ ಹಿಂದುರುಗುತ್ತಿದ್ದು ಈ ಸಂದರ್ಭ ಅವರನ್ನು ಭೇಟಿಯಾಗಲು ಡಿಕೆಶಿ ತೀರ್ಮಾನಿಸಿದ್ದಾರೆ. ರಾಜ್ಯ ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕರ ಆಯ್ಕೆಗೆ ತೀವ್ರ ಕಸರತ್ತು ನಡೆಯುತ್ತಿದ್ದು, ಈ ವಿಚಾರವಾಗಿ ಇಂದು ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎನ್ನಲಾಗಿದೆ.
ವಿಧಾನಸಭೆ ಚುನಾವಣೆಯಲ್ಲಿ 135 ಸ್ಥಾನವನ್ನು ಗೆದ್ದ ಕಾಂಗ್ರೆಸ್ ಸ್ಪಷ್ಟ ಬಹುಮತ ಪಡೆದಿದೆ. ಆದರೆ, ಕಾಂಗ್ರೆಸ್ಗೆ ಸಾರಥಿಯ ಆಯ್ಕೆ ಸಾಕಷ್ಟು ದೊಡ್ಡ ಕಗ್ಗಂಟಾಗಿದೆ. ಪಕ್ಷ ಸಂಘಟನೆ ಮಾಡಿ ಅಧಿಕಾರಕ್ಕೆ ತಂದಿರುವ ಹಿನ್ನೆಲೆ ತಮಗೆ ಸಿಎಂ ಸ್ಥಾನ ನೀಡಬೇಕೆಂದು ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಒತ್ತಡ ಹೇರಿದರೆ, ಹೆಚ್ಚಿನ ಶಾಸಕರ ಬೆಂಬಲವಿದ್ದು ಪಾರದರ್ಶಕ ಆಡಳಿತ ನೀಡುವ ಭರವಸೆಯನ್ನ ಸಿದ್ದರಾಮಯ್ಯ ನೀಡುತ್ತಿದ್ದಾರೆ. ಅಳೆದು ತೂಗಿ ಅಂತಿಮವಾಗಿ ಅಧಿಕಾರವನ್ನು ಇಬ್ಬರಿಗೂ ಸಮಾನವಾಗಿ ಹಂಚಲು ಕಾಂಗ್ರೆಸ್ ಪಕ್ಷ ತೀರ್ಮಾನಿಸಿದೆ. ಈ ವಿಚಾರವಾಗಿಯೇ ಮನವರಿಕೆ ಮಾಡಲು ರಾಜ್ಯನಾಯಕರನ್ನ ದಿಲ್ಲಿಗೆ ಆಹ್ವಾನಿಸಿದೆ.
ಪ್ರತಿಪಕ್ಷ ನಾಯಕ ಸಿದ್ದರಾಮಯ್ಯ ನಿನ್ನೆ ಮಧ್ಯಾಹ್ನವೇ ತಮ್ಮ ಬೆಂಬಲಿಗ ಶಾಸಕರೊಂದಿಗೆ ದೆಲ್ಲಿಗೆ ತೆರಳಿದ್ದು ಈಗಾಗಲೇ ಅವರ ಪರವಾಗಿ ಜನ ನಾಯಕರು ಮಲ್ಲಿಕಾರ್ಜುನ್ ಖರ್ಗೆ ಜೊತೆ ಸಮಾಲೋಚನೆ ಸಹ ನಡೆಸಿದ್ದಾರೆ. ಆದರೆ ಹೊಟ್ಟೆ ನೋವಿನ ಸಮಸ್ಯೆಯಿಂದ ಬಳಲುತ್ತಿದ್ದ ಕೆಪಿಸಿಸಿ ಅಧ್ಯಕ್ಷ ಡಿ ಕೆ ಶಿವಕುಮಾರ್ಗೆ ತಪಾಸಣೆ ನಡೆಸಿದ ವೈದ್ಯರು ವಿಶ್ರಾಂತಿ ಸೂಚಿಸಿದ್ದರು. ಈ ಹಿನ್ನೆಲೆ ನಿನ್ನೆ ರಾತ್ರಿ ಡೆಲ್ಲಿಗೆ ಪ್ರಯಾಣ ಬೆಳೆಸದೆ ವಿಶ್ರಾಂತಿ ಪಡೆದು ಪೂರ್ಣ ಗುಣಮುಖರಾಗದಿದ್ದರೂ ಇಂದು ಬೆಳಿಗ್ಗೆ ದೆಹಲಿಗೆ ಪ್ರಯಾಣ ಬೆಳಸಲು ಸಿದ್ದರಾಗಿದ್ದಾರೆ.