ಹುಬ್ಬಳ್ಳಿ , ಏ.11- ರೈಲ್ವೆ ಇಲಾಖೆಯ 10 ದಿನದಲ್ಲಿ 80,000 ಬೆಡ್ಗಳ ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಿದೆ. ಹುಬ್ಬಳ್ಳಿ ನೈರುತ್ಯ ರೈಲ್ವೆ ವತಿಯಿಂದ 312 ಐಸೊಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗಿದೆ ಎಂದು ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ಸುರೇಶ್ ಅಂಗಡಿ ಹೇಳಿದರು.
ಹುಬ್ಬಳ್ಳಿಯ ರೈಲ್ವೆ ವರ್ಕಶಾಪ್ನಲ್ಲಿ ನಿರ್ಮಿಸಲಾಗಿರುವ ಐಸೋಲೇಷನ್ ಬೋಗಿಗಳನ್ನು ವೀಕ್ಷಿಸಿ ನಂತರ ಮಾಧ್ಯಮ ಗೋಷ್ಠಿ ನಡೆಸಿ ಮಾತನಾಡಿದರು. ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ ಕನಸಿನಂತೆ ದೇಶಾದ್ಯಂತ 20,000 ಐಸೋಲೇಷನ್ ಬೋಗಿಗಳನ್ನು ನಿರ್ಮಾಣ ಮಾಡಲಾಗುತ್ತಿದೆ.
ಮೊದಲ ಹಂತದಲ್ಲಿ 5000 ಸಾವಿರ ಸ್ಲೀಪರ್ ಬೋಗಿಗಳನ್ನು ಐಸೊಲೇಷನ್ ಬೋಗಿಗಳನ್ನಾಗಿ ಪರಿವರ್ತಿಸಲಾಗಿದೆ. ಒಟ್ಟು 3,20,000 ಐಸೊಲೇಷನ್ ಬೆಡ್ಗಳನ್ನು ರೈಲ್ವೆ ಇಲಾಖೆಯಿಂದ ನಿರ್ಮಿಸುವ ಗುರಿ ಹೊಂದಲಾಗಿದೆ. ಈಗ ನಿರ್ಮಿಸಿರುವ ಐಸೊಲೇಷನ್ ಬೋಗಿಗಳನ್ನು ಆರೋಗ್ಯ ಇಲಾಖೆ ಹಾಗೂ ಗೃಹ ಇಲಾಖೆ ನಿರ್ದೇಶನದ ಮೇರೆಗೆ, ಅಗತ್ಯವಿರುವ ಕಡೆ ಸೇವೆಗಾಗಿ ಕಳುಹಿಸಿಕೊಡಲಾಗುವುದು. ಕೊರೊನಾ ಪಾಸಿಟಿವ್ ಬಂದ ವ್ಯಕ್ತಿಗಳನ್ನು ಐಸೊಲೇಷನ್ ಬೋಗಿಗಳಲ್ಲಿ ಇರಿಸಿ ಚಿಕಿತ್ಸೆ ನೀಡಬಹುದಾಗಿದೆ.
ನೈರುತ್ಯ ರೈಲ್ವೆಯ ಹುಬ್ಬಳ್ಳಿ, ಮೈಸೂರು, ಬೆಂಗಳೂರು ವಿಭಾಗ ಹಾಗೂ ವರ್ಕ್ ಶಾಪ್ಗಳಲ್ಲಿ 312 ಐಸೊಲೇಷನ್ ಬೋಗಿಗಳನ್ನು ನಿರ್ಮಿಸಗಿದೆ. ಇಲಾಖೆಯು ಕೊರೋನಾ ದಿಂದ ಉಂಟಾಗಬಹುದಾದ ಪರಿಸ್ಥಿತಿಯನ್ನು ಎದುರಿಸಲು ಸನ್ನದ್ಧವಾಗಿದೆ. ಸದ್ಯ ಎಲ್ಲಾ ಪ್ರಯಾಣಿಕರ ರೈಲುಗಳ ಸಂಚಾರ ರದ್ದುಪಡಿಸಲಾಗಿದೆ.
ಅಗತ್ಯ ವಸ್ತುಗಳನ್ನು ಸರಬರಾಜು ಮಾಡುವ ಸಲುವಾಗಿ ಸರುಕು-ಸಾಗಾಣಿಕೆ ರೈಲುಗಳು ಸಂಚಾರ ನಡೆಸುತ್ತಿವೆ. ಇಲಾಖೆ ನೌಕರರು ಹಗಲಿರುಳು ಶ್ರಮಿಸಿ ಐಸೊಲೇಷನ್ ಕೋಚ್ಗಳನ್ನು ನಿರ್ಮಿಸಿದ್ದಾರೆ. ರೈಲ್ವೆ ಪೊಲೀಸ್ ವತಿಯಿಂದ ಪ್ರತಿ ವಿಭಾಗದಲ್ಲೂ ಊಟ ನೀಡುವ ವ್ಯವಸ್ಥೆ ಮಾಡಲಾಗಿದೆ.
ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ಪರಿಸ್ಥಿತಿಯನ್ನು ಅವಲೋಕಿಸಿ ಲಾಕ್ಡೌನ್ ಕುರಿತು ನಿರ್ಧಾರ ಕೈಗೊಳ್ಳಲಿವೆ. ಐಸೊಲೇಷನ್ ಬೋಗಿಗಳನ್ನು ನಿರ್ಮಿಸುವಲ್ಲಿ ಶ್ರಮ ವಹಿಸಿದ ಎಲ್ಲ ರೈಲ್ವೆ ಇಲಾಖೆಯ ಎಲ್ಲಾ ಸಿಬ್ಬಂದಿ ಹಾಗೂ ಅಧಿಕಾರಿಗಳಿಗೆ ಅಭಿನಂದನೆಗಳು ಎಂದು ಹೇಳಿದರು.
ಕೋವಿಡ್-19 ಲಕ್ಷಣ ಕಾಣಿಸಿಕೊಳ್ಳವ ಪ್ರತಿಯೊಬ್ಬರೂ ಸ್ವಯಂಪ್ರೇರಿತರಾಗಿ ಬಂದು ವೈದ್ಯಕೀಯ ಪರೀಕ್ಷೆ ಮಾಡಿಸಿಕೊಳ್ಳಬೇಕು. ಸಾಮಾಜಿಕ ಅಂತರವನ್ನು ಕಾಪಾಡಿಕೊಳ್ಳುವುದರ ಮೂಲಕ ಕೊರೊನಾ ವೈರಸ್ ಹರಡುವುದನ್ನು ತಡೆಗಟ್ಟಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಬೃಹತ್ ಮತ್ತು ಮಧ್ಯಮ ಕೈಗಾರಿಕೆ, ಸಾರ್ವಜನಿಕ ಉದ್ದಿಮೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಜಗದೀಶ್ ಶೆಟ್ಟರ್, ಶಾಸಕ ಅರವಿಂದ ಬೆಲ್ಲದ, ನೈರುತ್ಯ ರೈಲ್ವೆ ಮುಖ್ಯ ವ್ಯವಸ್ಥಾಪಕ ಅಜಯ್ ಕುಮಾರ್ ಸಿಂಗ್, ಹೆಚ್ಚುವರಿ ವ್ಯವಸ್ಥಾಪಕ ಪ್ರಶಾಂತ್ ಕುಮಾರ್ ಮಿಶ್ರಾ, ಹುಬ್ಬಳ್ಳಿ ಸಿಡಬ್ಲೂಎಂ ನೀರಜ್ ಜೈನ್ ಸೇರಿದಂತೆ ಇತರೆ ಅಧಿಕಾರಿಗಳು ಸಿಬ್ಬಂದಿ ಉಪಸ್ಥಿತರಿದ್ದರು.