ಬೆಂಗಳೂರು: ಹಲವು ವರ್ಷಗಳಿಂದ ಒಸಿ-ಸಿಸಿ ಸಮಸ್ಯೆಯಿಂದ ತಾತ್ಕಾಲಿಕ ವಿದ್ಯುತ್ ಸಂಪರ್ಕದಲ್ಲಿದ್ದ ಮನೆಗಳಿಗೆ ಇಂದಿನಿಂದ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿದೆ. ಈ ಮೂಲಕ ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕರಿಸಿದ ಬೆನ್ನಲ್ಲೇ ಡಿ.ಕೆ. ಶಿವಕುಮಾರ್ ಜನಸಾಮಾನ್ಯರ ಬಹುಕಾಲದ ಸಮಸ್ಯೆಗೆ ಪರಿಹಾರ ನೀಡಲು ಮುಂದಾಗಿದ್ದಾರೆ.
ಬೆಂಗಳೂರು ಸೇರಿದಂತೆ ರಾಜ್ಯದ ಬಡ ಮತ್ತು ಮಧ್ಯಮ ವರ್ಗದ ಮನೆ ಮಾಲೀಕರಿಗೆ ಅನುಕೂಲವಾಗುವಂತೆ ಕರ್ನಾಟಕ ಸರ್ಕಾರ ಮಹತ್ವದ ನಿರ್ಧಾರ ಕೈಗೊಂಡಿದೆ. ಪ್ರಾರಂಭಿಕ ಪ್ರಮಾಣಪತ್ರ ಮತ್ತು ಸ್ವಾಧೀನಾನುಭವ ಪ್ರಮಾಣಪತ್ರ ನಿಯಮಗಳಿಂದ ಒಂದು ಬಾರಿಯ ವಿನಾಯಿತಿ ನೀಡಿದ್ದು, ಈ ಸಂಬಂಧ ಜೂನ್ 5, 2026 ರಂದು ಅಧಿಕೃತ ಆದೇಶ ಹೊರಡಿಸಲಾಗಿದೆ.
ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿತ್ತು. ಹಲವು ವರ್ಷಗಳಿಂದ ಒಸಿ ಮತ್ತು ಸಿಸಿ ಇಲ್ಲದ ಕಾರಣ ತಾತ್ಕಾಲಿಕ ವಿದ್ಯುತ್ ಸಂಪರ್ಕದಲ್ಲಿದ್ದ ಮನೆಗಳಿಗೆ ಶಾಶ್ವತ ಸಂಪರ್ಕ ಕಲ್ಪಿಸಲು ಸರ್ಕಾರ ಮುಂದಾಗಿತ್ತು.
ಸಿಎಂ ಆದೇಶದ ಬೆನ್ನಲ್ಲೇ ಬೆಸ್ಕಾಂ ಅಧಿಕಾರಿಗಳು ಮತ್ತು ಸಿಬ್ಬಂದಿ ಕಾರ್ಯಪ್ರವೃತ್ತರಾಗಿದ್ದಾರೆ. ಬಾಕಿ ಉಳಿದಿರುವ ತಾತ್ಕಾಲಿಕ ವಿದ್ಯುತ್ ಸಂಪರ್ಕಗಳನ್ನು ಶಾಶ್ವತ ಸಂಪರ್ಕಗಳಾಗಿ ಪರಿವರ್ತಿಸುವ ಕಾರ್ಯಕ್ಕೆ ಇಂದಿನಿಂದ ಚಾಲನೆ ನೀಡಲಾಗಿದೆ. ಈ ಪ್ರಕ್ರಿಯೆಯನ್ನು ಸಮರೋಪಾದಿ ವೇಗದಲ್ಲಿ ಪೂರ್ಣಗೊಳಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.
ಬೆಸ್ಕಾಂ ಅಂಕಿಅಂಶಗಳ ಪ್ರಕಾರ, 30×40 ಮತ್ತು 60×40 ನಿವೇಶನಗಳಲ್ಲಿ ನಿರ್ಮಾಣಗೊಂಡ ಮನೆಗಳನ್ನು ಸೇರಿಸಿ ಒಟ್ಟು 1.54 ಲಕ್ಷಕ್ಕೂ ಹೆಚ್ಚು ವಿದ್ಯುತ್ ಸಂಪರ್ಕ ಅರ್ಜಿಗಳು ಬಾಕಿ ಇವೆ. ಈ ಎಲ್ಲ ಮನೆಗಳಿಗೆ ಹಂತ ಹಂತವಾಗಿ ಶಾಶ್ವತ ವಿದ್ಯುತ್ ಸಂಪರ್ಕ ಕಲ್ಪಿಸಲು ಕ್ರಮ ಕೈಗೊಳ್ಳಲಾಗಿದೆ. ವರ್ಷಗಳಿಂದ ಶಾಶ್ವತ ವಿದ್ಯುತ್ ಸಂಪರ್ಕಕ್ಕಾಗಿ ಕಾಯುತ್ತಿದ್ದ ಸಾವಿರಾರು ಕುಟುಂಬಗಳಿಗೆ ಈ ನಿರ್ಧಾರದಿಂದ ದೊಡ್ಡ ಮಟ್ಟದ ಅನುಕೂಲವಾಗಲಿದೆ.
Laxmi News 24×7