ಕೃಷಿ ವಿಮೆ ಯೋಜನೆಯಡಿ ರೈತರಿಗೆ ಅಗತ್ಯ ನೆರವು ಹಾಗೂ ಸೌಲಭ್ಯಗಳು ಸಮರ್ಪಕವಾಗಿ ದೊರೆಯುವಂತೆ ರಾಷ್ಟ್ರೀಕೃತ ಬ್ಯಾಂಕ್ ಅಧಿಕಾರಿಗಳು ಸಂಪೂರ್ಣ ಸಹಕಾರ ನೀಡಬೇಕು ಎಂದು ಸಂಸದ ಜಗದೀಶ ಶೆಟ್ಟರ ಸೂಚಿಸಿದರು.
ನಗರದ ಜಿಪಂ ಸಭಾಂಗಣದಲ್ಲಿ ಸೋಮವಾರ ನಡೆದ ಜಿಲ್ಲಾ ಮಟ್ಟದ ಬ್ಯಾಂಕ್ ಅಧಿಕಾರಿಗಳ ತ್ರೈಮಾಸಿಕ ಸಭೆಯಲ್ಲಿ ಮಾತನಾಡಿ, ಕೆಲವು ರಾಷ್ಟ್ರೀಕೃತ ಬ್ಯಾಂಕ್ಗಳು ಕೃಷಿ ವಿಮೆಗೆ ಸಂಬಂಧಿಸಿದ ಕಾರ್ಯಗಳಲ್ಲಿ ನಿರೀಕ್ಷಿತ ಮಟ್ಟದಲ್ಲಿ ಸಹಕರಿಸುತ್ತಿಲ್ಲ ಎಂಬ ದೂರುಗಳು ಬಂದಿವೆ. ರೈತರು ಬೆಳೆಹಾನಿ ಸೇರಿದಂತೆ ವಿವಿಧ ಕಾರಣಗಳಿಂದ ಸಂಕಷ್ಟ್ಟಕ್ಕೆ ಒಳಗಾದ ಸಂದರ್ಭದಲ್ಲಿ ಕೃಷಿ ವಿಮೆ ಯೋಜನೆ ಸೌಲಭ್ಯ ರೈತರಿಗೆ ದೊರೆಯುವಂತೆ ನೋಡಿಕೊಳ್ಳಬೇಕು. ನಿರ್ಲಕ್ಷಿಸಿದರೆ ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದು ಎಚ್ಚರಿಸಿದರು.
ಗ್ರಾಮಗಳಲ್ಲಿ ಹೊಸ ಬ್ಯಾಂಕ್ ಶಾಖೆಗಳ ಸ್ಥಾಪನೆಗೆ ಸಾರ್ವಜನಿಕರಿಂದ ಬೇಡಿಕೆಗಳು ಬರುತ್ತಿದ್ದು, ಬ್ಯಾಂಕಿಂಗ್ ಸೇವೆಗಳಲ್ಲಿ ಕನ್ನಡ ಭಾಷೆ ಬಳಕೆಯನ್ನು ಕಡ್ಡಾಯವಾಗಿ ಅನುಷ್ಠಾನಗೊಳಿಸಬೇಕು. ಭಾಷೆ ಕಾರಣದಿಂದ ಗ್ರಾಹಕರು ತೊಂದರೆ ಅನುಭವಿಸದಂತೆ ನೋಡಿಕೊಳ್ಳಬೇಕು. ಆರ್ಥಿಕ ಅಭಿವೃದ್ಧಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವಲ್ಲಿ ಬ್ಯಾಂಕ್ಗಳು ಮಹತ್ವದ ಪಾತ್ರವಹಿಸುತ್ತವೆ ಎಂದರು.
ಕೃಷಿ ಇಲಾಖೆ ಜಂಟಿ ನಿರ್ದೇಶಕ ಎಚ್.ಡಿ.ಕೋಳೇಕರ ಮಾತನಾಡಿ, ಪ್ರಧಾನಮಂತ್ರಿ ಸೂಕ್ಷ್ಮ ಆಹಾರ ಸಂಸ್ಕರಣಾ ಉದ್ದಿಮೆಗಳ ಯೋಜನೆ (ಒಈಒಇ) ಅಡಿಯಲ್ಲಿ ಬೆಳಗಾವಿ ಜಿಲ್ಲೆ ಮಹತ್ವದ ಸಾಧನೆ ಮಾಡಿದ್ದು, ಇದುವರೆಗೆ 1,265 ಸಾಲಗಳನ್ನು ಮಂಜೂರು ಮಾಡಲಾಗಿದೆ. ಫಲಾನುಭವಿಗಳಿಗೆ 37.79 ಕೋಟಿ ಸಹಾಯಧನ ಬಿಡುಗಡೆಯಾಗಿದ್ದು, ಬೆಳೆ ವಿಮಾ ಅರ್ಜಿಗಳನ್ನು ಬ್ಯಾಂಕ್ಗಳು ತ್ವರಿತವಾಗಿ ಸ್ವೀಕರಿಸಿ, ಸಮಯಕ್ಕೆ ಸರಿಯಾಗಿ ಪ್ರಕ್ರಿಯೆಗೊಳಿಸುವಂತೆ ಮನವಿ ಮಾಡಿದರು.
ಲೀಡ್ ಜಿಲ್ಲಾ ವ್ಯವಸ್ಥಾಪಕ ಪ್ರಶಾಂತ ಗೋಡಕೆ ಮಾತನಾಡಿ, ಜಿಲ್ಲೆಯ ಬ್ಯಾಂಕ್ಗಳು ಪ್ರಸಕ್ತ ಹಣಕಾಸು ವರ್ಷದ ಮೊದಲ ತ್ರೈಮಾಸಿಕದಲ್ಲಿ ಉತ್ತಮ ಸಾಧನೆ ಮಾಡಿವೆ. ವಿವಿಧ ಆದ್ಯತಾ ಕ್ಷೇತ್ರಗಳಿಗೆ 4,985 ಕೋಟಿ ರೂ. ಸಾಲ ವಿತರಣೆ ಹಾಗೂ 3,392 ಕೋಟಿ ರೂ. ಸಾಲ ಬಿಡುಗಡೆ ಮಾಡಲಾಗಿದ್ದು, ಶೇ.15ರಷ್ಟು ಗುರಿ ಮೀರಿ ಶೇ.34.76 ಸಾಧನೆ ದಾಖಲಿಸಿರುವುದು ಜಿಲ್ಲೆಯ ಬ್ಯಾಂಕಿಂಗ್ ಕ್ಷೇತ್ರದ ಗಮನಾರ್ಹ ಸಾಧನೆಯಾಗಿದೆ ಎಂದರು.
ಜಿಪಂ ಯೋಜನಾ ನಿರ್ದೇಶಕ ರವಿ ಬಂಗಾರೆಪ್ಪ, ಆರ್ಬಿಐ ಸಹಾಯಕ ಮಹಾ ಪ್ರಬಂಧಕ ಆರ್.ಪ್ರಭಾಕರನ್, ನಬಾರ್ಡ್ ಜಿಲ್ಲಾ ಅಭಿವೃದ್ಧಿ ವ್ಯವಸ್ಥಾಪಕ ಅಭಿನವ್ ಯಾದವ, ಕೆನರಾ ಬ್ಯಾಂಕ್ ಪ್ರಾದೇಶಿಕ ಮುಖ್ಯಸ್ಥ ಎಂ.ಚಂದ್ರಶೇಖರ ಇತರರಿದ್ದರು.
Laxmi News 24×7