ಕಠ್ಮಂಡು: ನೇಪಾಳದಲ್ಲಿ ಸಂಭವಿಸಿದ ಭೀಕರ ಪ್ರವಾಹದಿಂದಾಗಿ ಸಾವನ್ನಪ್ಪಿದ್ದವರ ಸಂಖ್ಯೆ ಕ್ಷಣಕ್ಷಣಕ್ಕೂ ಏರಿಕೆಯಾಗುತ್ತಿದೆ. ಇದರ ಬೆನ್ನಲ್ಲೇ ನೆರವು ಬೇಡ ಎಂದಿದ್ದ ನೇಪಾಳ ಇದೀಗ ನಿರ್ಧಾರ ಬದಲಿಸಿ, ವಿದೇಶಿ ಸಹಾಯ ಪಡೆಯಲು ಒಪ್ಪಿಕೊಂಡಿದೆ.
ಭೀಕರ ಜಲಪ್ರಳಯದಲ್ಲಿ ಈಗಾಗಲೇ 550ಕ್ಕೂ ಅಧಿಕ ಜನರು ಪ್ರಾಣಕಳೆದುಕೊಂಡಿದ್ದು, 2000ಕ್ಕೂ ಹೆಚ್ಚು ಮಂದಿ ನಾಪತ್ತೆಯಾಗಿದ್ದಾರೆ. ಇದರ ನಡುವೆ ದುರಂತದ ಪ್ರಭಾವವನ್ನರಿತ ನೇಪಾಳ ಸರ್ಕಾರ ಇದೀಗ ತನ್ನ ನಿರ್ಧಾರವನ್ನು ಬದಲಿಸಿ, ರಕ್ಷಣಾ ಕಾರ್ಯಾಚರಣೆಗಾಗಿ ನೆರವು ನೀಡುವುದಾಗಿ ತಿಳಿಸಿದ್ದ ಭಾರತ, ಚೀನಾ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಕೊರಿಯಾ ದೇಶಗಳ ಸಹಾಯವನ್ನು ಸ್ವೀಕರಿಸಲು ಒಪ್ಪಿಕೊಂಡಿದೆ.
ನೂರಾರು ಜನರನ್ನು ಬಲಿಪಡೆದ ಪ್ರವಾಹದ ದುರಂತದ ನಂತರವೂ ವಿದೇಶಿ ನೆರವನ್ನು ಸ್ವೀಕರಿಸಲು ಶುಕ್ರವಾರ (ಆ.28) ನೇಪಾಳ ಸರ್ಕಾರ ಹಿಂದೇಟು ಹಾಕಿತ್ತು. ಈ ಭೀಕರ ಪ್ರವಾಹ ಪರಿಸ್ಥಿತಿಯನ್ನು ಎದುರಿಸಲು ನಾವು ಸಮರ್ಥರಾಗಿದ್ದೇವೆ. ವಿದೇಶಗಳ ಸಹಾಯದ ಅಗತ್ಯ ಇಲ್ಲ. ಆದರೆ ಸದ್ಯಕ್ಕೆ ಸಹಾಯ ಬೇಡ, ಸಾಧ್ಯವಾದರೆ ಹಣಕಾಸಿನ ನೆರವು ನೀಡಿ ಎಂದಿತ್ತು. ಪ್ರವಾಹ ದುರಂತದ ಬಳಿಕ ತಮ್ಮ ದೇಶದ ನಾಗರಿಕರು ನಾಪತ್ತೆಯಾಗಿರುವ ರಾಷ್ಟ್ರಗಳ ಒತ್ತಡದಿಂದಾಗಿ ನೇಪಾಳ ಈ ಯು-ಟರ್ನ್ ತೆಗೆದುಕೊಂಡಿದ್ದು, ಪ್ರಸ್ತುತ ರಕ್ಷಣಾ ಕಾರ್ಯಾಚರಣೆ ಮತ್ತು ಫೋರೆನ್ಸಿಕ್ ತಪಾಸಣೆ ನಡೆಸಲು ಭಾರತ, ಚೀನಾ, ಆಸ್ಟ್ರೇಲಿಯಾ ಮತ್ತು ದಕ್ಷಿಣ ಕೊರಿಯಾದ ತಂಡಗಳಿಗೆ ಹಾಗೂ ತಜ್ಞರಿಗೆ ಅವಕಾಶ ನೀಡಿದೆ.
ಇದರ ನಡುವೆ, ನೇಪಾಳದ ವಿನಂತಿಯ ಮೇರೆಗೆ ಭಾರತ ಸರ್ಕಾರ ವೈದ್ಯಕೀಯ ನೆರವು, ಎಂಜಿನಿಯರಿಂಗ್ ತಂಡಗಳನ್ನು ಕಳುಹಿಸಲು ಮತ್ತು ಹಾನಿಗೊಳಗಾದ ಮೂಲಸೌಕರ್ಯವನ್ನು ಪುನಃಸ್ಥಾಪನೆಗೆ ಸಹಾಯ ಮಾಡಲು ಮುಂದಾಗಿದೆ. ಹೆಚ್ಚುವರಿ ಮಾನವೀಯ ಸಹಾಯಕ್ಕಾಗಿ ಸಿದ್ಧತೆ ನಡೆಯುತ್ತಿದೆ ಎಂದು ವಿದೇಶಾಂಗ ಸಚಿವಾಲಯ ತಿಳಿಸಿದೆ.
ಈಗಾಗಲೇ ಪರಿಹಾರ ಸಾಮಗ್ರಿಗಳನ್ನು ಹೊತ್ತ ಭಾರತದ ಎರಡು ವಿಮಾನಗಳು ನೇಪಾಳಕ್ಕೆ ತಲುಪಿವೆ. ಇನ್ನೊಂದು ವಿಮಾನ ಶೀಘ್ರದಲ್ಲೇ ನೇಪಾಳಕ್ಕೆ ತಲುಪಲಿದೆ. ಇದರೊಂದಿಗೆ ಸುರಂಗ ರಕ್ಷಣಾ ತಂಡವನ್ನು ಕಳುಹಿಸಲು ಸಿದ್ಧತೆ ನಡೆಯುತ್ತಿದೆ. ಇದಕ್ಕಾಗಿ ಮೊದಲು ಒಂದು ಪರಿಶೀಲನಾ ತಂಡವನ್ನು ಕಳುಹಿಸಲಾಗುತ್ತಿದೆ. ವೈದ್ಯಕೀಯ ತಂಡವನ್ನು ಸಹ ಕಳುಹಿಸುತ್ತಿದ್ದೇವೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ವಕ್ತಾರ ರಣಧೀರ್ ಜೈಸ್ವಾಲ್ ತಿಳಿಸಿದ್ದಾರೆ.
Laxmi News 24×7