ಮಡಿಕೇರಿ: ಬಿಡದಿ ಟೌನ್ಶಿಪ್ ವಿರುದ್ಧದ ಹೋರಾಟದಲ್ಲಿ ಭಾಗವಹಿಸಲು ತೆರಳುತ್ತಿದ್ದ ಕೊಡಗಿನ ರೈತರನ್ನ ಜಿಲ್ಲೆಯ ಗಡಿಭಾಗದಲ್ಲೇ ಪೊಲೀಸರು ತಡೆದಿದ್ದಾರೆ.
ಪೋನ್ನಂಪೇಟೆ ತಾಲೂಕಿನ ತಿತಿಮತಿ ಗ್ರಾಮದಲ್ಲಿ ನಡೆದ ಈ ಬೆಳವಣಿಗೆ ಕೆಲಕಾಲ ಉದ್ವಿಗ್ನ ವಾತಾವರಣಕ್ಕೆ ಕಾರಣವಾಯಿತು. ಪೊಲೀಸರ ಕ್ರಮಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿದ ರೈತರು ತಿತಿಮತಿ – ಗೋಣಿಕೊಪ್ಪ ಮುಖ್ಯರಸ್ತೆಯಲ್ಲೇ ಕುಳಿತು ಪ್ರತಿಭಟನೆ ಆರಂಭಿಸಿದರು.
ಪ್ರತಿಭಟನೆಯಿಂದ ಹೆದ್ದಾರಿಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡು ಸಾರ್ವಜನಿಕರು ತೊಂದರೆ ಅನುಭವಿಸುತ್ತಿದ್ದಾರೆ. ಪ್ರತಿಭಟನಾ ಸ್ಥಳದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದ್ದು, ರೈತರು ಮತ್ತು ಪೊಲೀಸರ ನಡುವೆ ಮಾತಿನ ಚಕಮಕಿ ನಡೆಯಿತು. ಆದರೂ, ಪ್ರತಿಭಟನೆ ಮುಂದುವರಿಸುವುದಾಗಿ ರೈತ ಸಂಘಟನೆಯ ಪ್ರಮುಖರು ಪಟ್ಟು ಹಿಡಿದರು.
ರೈತ ಮುಖಂಡ ಸುಜಯ್ ಬೋಪಯ್ಯ ಹಾಗೂ ಸುಭಾಶ್ ಸುಬ್ಬಯ್ಯ ಅವರ ನೇತೃತ್ವದಲ್ಲಿ ನೂರಾರು ರೈತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದು, ತಿತಿಮತಿ ಪಟ್ಟಣವನ್ನು ಪೊಲೀಸರು ಸರ್ಪಗಾವಲಿನಲ್ಲಿ ಇಟ್ಟಿದ್ದಾರೆ. ಪರಿಸ್ಥಿತಿ ಉದ್ವಿಗ್ನವಾಗಿದ್ದರೂ, ಸ್ಥಳದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡಲು ಪೊಲೀಸರು ಕಟ್ಟೆಚ್ಚರ ವಹಿಸಿದ್ದಾರೆ.
Laxmi News 24×7