ಬೆಂಗಳೂರು: ಸಿಲಿಕಾನ್ ಸಿಟಿಯಲ್ಲಿ ಕಳಪೆ ರಸ್ತೆ ಕಾಮಗಾರಿ ನಡೆಸುವ ಅಧಿಕಾರಿಗಳು ಮತ್ತು ಗುತ್ತಿಗೆದಾರರಿಗೆ ಬೆಂಗಳೂರು ಅಭಿವೃದ್ಧಿ ಸಚಿವ ಕೃಷ್ಣ ಬೈರೇಗೌಡ ಅವರು ಬಿಗ್ ಶಾಕ್ ನೀಡಿದ್ದಾರೆ. ರಸ್ತೆ ಡಾಂಬರೀಕರಣದಲ್ಲಿ ನಡೆದಿದ್ದ ಗಂಭೀರ ಅಕ್ರಮವನ್ನು ಖುದ್ದಾಗಿ ಪತ್ತೆಹಚ್ಚಿ ಅಧಿಕಾರಿಗಳಿಗೆ ತರಾಟೆಗೆ ತೆಗೆದುಕೊಂಡ ಬೆನ್ನಲ್ಲೇ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸಹಾಯಕ ಎಂಜಿನಿಯರ್ಗೆ ತಲೆದಂಡವಾಗಿದೆ.
ರಸ್ತೆ ಡಾಂಬರೀಕರಣ ಕಾಮಗಾರಿಯಲ್ಲಿ ಗಂಭೀರ ನಿಯಮ ಉಲ್ಲಂಘನೆ ಮತ್ತು ಕರ್ತವ್ಯ ಲೋಪ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಸಹಾಯಕ ಎಂಜಿನಿಯರ್ ಅವರನ್ನು ಸೇವೆಯಿಂದ ತಕ್ಷಣದಿಂದ ಜಾರಿಗೆ ಬರುವಂತೆ ಅಮಾನತುಗೊಳಿಸಿ ಅಧಿಕೃತ ಆದೇಶ ಹೊರಡಿಸಲಾಗಿದೆ.
ವಾರ್ಡ್ ಸಂಖ್ಯೆ 110 ರ ಸಂಪಂಗಿರಾಮನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿದ್ದ ಸಹಾಯಕ ಎಂಜಿನಿಯರ್ ಪೂಜಾರಪ್ಪ ಅವರೇ ಅಮಾನತುಗೊಂಡ ಅಧಿಕಾರಿ. ಇಂದು ಬೆಂಗಳೂರು ಬೆಂಗಳೂರು ಕೇಂದ್ರ ನಗರ ಪಾಲಿಕೆಯ ಆಯುಕ್ತರು ಶಿವಾಜಿನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಹಠಾತ್ ತಪಾಸಣೆ ನಡೆಸಿದ್ದರು.
ವಸಂತನಗರ ಉಪವಿಭಾಗದ ಸಂಪಂಗಿರಾಮನಗರ ವ್ಯಾಪ್ತಿಯಲ್ಲಿ ‘ಇನ್ಫ್ರಾಸ್ಟ್ರಕ್ಚರ್ ಪ್ರೋಗ್ರಾಂ’ ಅಡಿಯಲ್ಲಿ ಕೈಗೊಳ್ಳಲಾಗಿದ್ದ ಆರ್ಟೀರಿಯಲ್ ಮತ್ತು ಸಬ್ ಆರ್ಟೀರಿಯಲ್ ರಸ್ತೆಗಳ ಅಸ್ಫಾಲ್ಟಿಂಗ್ (ಡಾಂಬರೀಕರಣ) ಕಾಮಗಾರಿಯನ್ನು ಪರಿಶೀಲಿಸಿದಾಗ ಅಕ್ರಮ ಬೆಳಕಿಗೆ ಬಂದಿದೆ.

ಕ್ರಿಯಾಯೋಜನೆ ಪ್ರಕಾರ ಇರಬೇಕಾದ ಸರಿಯಾದ ಪ್ರಮಾಣ (Proportionate) ಹಾಗೂ ಅಗತ್ಯ ದಪ್ಪದಲ್ಲಿ (Thickness) ಡಾಂಬರೀಕರಣ ಮಾಡದೇ, ಅತ್ಯಂತ ಕಡಿಮೆ ಪ್ರಮಾಣದಲ್ಲಿ ಕಾಮಗಾರಿ ನಡೆಸಿರುವುದು ಪತ್ತೆಯಾಗಿದೆ.
ಹೊಣೆಗಾರಿಕೆಯುಳ್ಳ ಅಧಿಕಾರಿಯಾಗಿದ್ದರೂ ಪೂಜಾರಪ್ಪ ಅವರು ಸ್ಥಳದಲ್ಲಿ ನಿಂತು ಸರಿಯಾಗಿ ಕೆಲಸ ನಿರ್ವಹಿಸಿಲ್ಲ. ಬದಲಿಗೆ ಗುಣಮಟ್ಟವಿಲ್ಲದ ಕಾಮಗಾರಿ ನಡೆಸಿದ ಗುತ್ತಿಗೆದಾರರೊಂದಿಗೆ ಶಾಮೀಲಾಗಿ, ಪಾಲಿಕೆಗೆ ಆರ್ಥಿಕ ನಷ್ಟ ಉಂಟುಮಾಡಿರುವುದು ಮೇಲ್ನೋಟಕ್ಕೆ ಕಂಡುಬಂದಿದೆ.
ಅಧಿಕಾರಿಯ ಬೇಜವಾಬ್ದಾರಿತನ ಹಾಗೂ ಅಸಡ್ಡೆ ಮನೋಭಾವನೆಯನ್ನು ಗಂಭೀರವಾಗಿ ಪರಿಗಣಿಸಿರುವ ಪಾಲಿಕೆ1957ರ ಸಿಸಿಎ ನಿಯಮ 10 ರ ಅಡಿಯಲ್ಲಿ ಪೂಜಾರಪ್ಪ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ಸೇವೆಯಿಂದ ಅಮಾನತುಗೊಳಿಸಿದೆ.
ಕೃಷ್ಣಬೈರೇಗೌಡ ಹೇಳಿದ್ದೇನು?
ನಾನು ಆಗಾಗ್ಗೆ ಹೀಗೆ ಮಾಡಬೇಕಾಗಿಲ್ಲ ಎಂದು ನಾನು ನಿಜವಾಗಿಯೂ ಭಾವಿಸುತ್ತೇನೆ. ಆದರೆ, ಅಧಿಕಾರಿಗಳು ಮತ್ತು ಗುತ್ತಿಗೆದಾರರು ತಮ್ಮ ಕೆಲಸವನ್ನು ಸರಿಯಾಗಿ ನಿರ್ವಹಿಸದಿದ್ದಾಗ ಮಾತ್ರ ನಾನು ಇಂತಹ ಕಠಿಣ ಕ್ರಮಗಳನ್ನು ತೆಗೆದುಕೊಳ್ಳಬೇಕಾಗುತ್ತದೆ. ಅವರು ತಮ್ಮ ಕೆಲಸವನ್ನು ಸರಿಯಾಗಿ ಮಾಡುವಂತೆ ನಾನು ಮನವಿ ಮಾಡುತ್ತೇನೆ ಎಂದು ಕೃಷ್ಣ ಬೈರೇಗೌಡ ಎಕ್ಸ್ನಲ್ಲಿ ತಿಳಿಸಿದ್ದಾರೆ.
ಇಂದು, ನಾನು ಡಾಂಬರೀಕರಣದ ಕೆಲಸವನ್ನು ಗಮನಿಸಿದೆ. ಗುಣಮಟ್ಟದ ಬಗ್ಗೆ ನನಗೆ ಸಂದೇಹವಿತ್ತು. ಈ ಡಾಂಬರು ಕೆಲಸವನ್ನು ಪರಿಶೀಲಿಸಲು ನಾನು ಆಯುಕ್ತರನ್ನು ಕೇಳಿದೆ. ವಾಸ್ತವವಾಗಿ ಕೆಲಸವು ಕಳಪೆ ಗುಣಮಟ್ಟದ್ದಾಗಿರುವುದು ಕಂಡುಬಂದಿದೆ. ಪರಿಣಾಮ ಅಧಿಕಾರಿಯನ್ನು ಅಮಾನತುಗೊಳಿಸಲಾಗಿದೆ ಮತ್ತು ಗುತ್ತಿಗೆದಾರರಿಗೆ ದಂಡ ವಿಧಿಸಲಾಗಿದೆ.
Laxmi News 24×7