Breaking News

ಮಳೆ ಕೊರತೆಯಿಂದ ವಿದ್ಯುತ್ ಉತ್ಪಾದನೆಯಲ್ಲಿ ವ್ಯತ್ಯಯ ಸಾಧ್ಯ; ಮುಂಜಾಗ್ರತಾ ಕ್ರಮ ಕೈಗೊಳ್ಳಿ: ಸಿಎಂ ಸೂಚನೆ

Spread the love

ಬೆಂಗಳೂರು: ಎಲ್ ನಿನೊ ಪರಿಣಾಮದಿಂದ ಜಲವಿದ್ಯುತ್ ಉತ್ಪಾದನೆ ಕುಸಿಯುವ ಸಾಧ್ಯತೆ ಇರುವುದನ್ನು ಗಮನದಲ್ಲಿಟ್ಟುಕೊಂಡು, ವಿಶೇಷ ತುರ್ತು ಕಾರ್ಯಯೋಜನೆ ರೂಪಿಸಬೇಕು. ಜೊತೆಗೆ ವಿದ್ಯುತ್ ಸಂಗ್ರಹಣೆ ಹಾಗೂ ಇತರೆ ಮೂಲಗಳಿಂದ ಉತ್ಪಾದನೆ ಹೆಚ್ಚಿಸಲು ತುರ್ತು ಗಮನ ಹರಿಸಬೇಕು ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸೂಚನೆ ನೀಡಿದ್ದಾರೆ.

ಮೊದಲ ಬಾರಿಗೆ ಇಂಧನ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ನಡೆಸಿದ ಮುಖ್ಯಮಂತ್ರಿ, ಬರಗಾಲದ ಪರಿಸ್ಥಿತಿ ಎದುರಿಸಲು ಇಲಾಖೆ ಯಾವ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ ಎಂಬುದರ ಬಗ್ಗೆ ಮಾಹಿತಿ ಪಡೆದರು. ಸಾರ್ವಜನಿಕರಿಗೆ ಯಾವುದೇ ರೀತಿಯ ವಿದ್ಯುತ್ ತೊಂದರೆ ಆಗದಂತೆ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕು. ಇಂಧನ ಭದ್ರತೆಗಾಗಿ ಸರ್ಕಾರಕ್ಕೆ ಮೀಸಲಾದ ಕಲ್ಲಿದ್ದಲು ಗಣಿಗಳನ್ನು ಕಾರ್ಯಾರಂಭಗೊಳಿಸಿ, ಸಾಕಷ್ಟು ಕಲ್ಲಿದ್ದಲು ಸಂಗ್ರಹವನ್ನು ನಿರಂತರವಾಗಿ ಕಾಯ್ದುಕೊಳ್ಳಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಹಿಂದಿನ ವರ್ಷಕ್ಕೆ ಹೋಲಿಸಿದರೆ ಸದ್ಯ ರಾಜ್ಯದಲ್ಲಿ ವಿದ್ಯುತ್ ಸಂಗ್ರಹಣೆಯ ಸ್ಥಿತಿ ಉತ್ತಮವಾಗಿದೆ. ಕಳೆದ ಮೂರು ವರ್ಷಗಳಿಂದ ವಿದ್ಯುತ್ ಕಡಿತವಿಲ್ಲದೆ ನಿರ್ವಹಣೆ ಮಾಡಲಾಗಿದೆ ಎಂದು ಅಧಿಕಾರಿಗಳು ಸಭೆಯಲ್ಲಿ ಮಾಹಿತಿ ನೀಡಿದರು.

ಇದಕ್ಕೆ ಪ್ರತಿಕ್ರಿಯಿಸಿದ ಮುಖ್ಯಮಂತ್ರಿ, ನವೀಕರಿಸಬಹುದಾದ ಇಂಧನದ ಸಮರ್ಥ ನಿರ್ವಹಣೆಗಾಗಿ ಬ್ಯಾಟರಿ ಎನರ್ಜಿ ಸ್ಟೋರೇಜ್ ಸಿಸ್ಟಮ್  ಹಾಗೂ ಪಂಪ್ಡ್ ಸ್ಟೋರೇಜ್ ಯೋಜನೆಗಳನ್ನು ತ್ವರಿತವಾಗಿ ಜಾರಿಗೊಳಿಸಬೇಕು ಎಂದು ಸೂಚಿಸಿದರು.

ನಾವು ಐಟಿ ಕ್ಯಾಪಿಟಲ್ ಆಗಿದ್ದೇವೆ. ಕೃತಕ ಬುದ್ಧಿಮತ್ತೆ  ಕ್ಷೇತ್ರದಲ್ಲೂ ರಾಜ್ಯವನ್ನು ಮುಂಚೂಣಿಗೆ ತರಲು ಮುಂದಾಗಿದ್ದೇವೆ. ಹೀಗಾಗಿ ಡೇಟಾ ಸೆಂಟರ್‌ಗಳು, ಎಐ ಮೂಲಸೌಕರ್ಯ ಹಾಗೂ ಡಿಜಿಟಲ್ ಆರ್ಥಿಕತೆಯಿಂದ ಹೆಚ್ಚುತ್ತಿರುವ ವಿದ್ಯುತ್ ಬೇಡಿಕೆಗೆ ಈಗಿನಿಂದಲೇ ಸಿದ್ಧತೆ ಮಾಡಿಕೊಳ್ಳಬೇಕು ಎಂದು ಹೇಳಿದರು.

ಗೃಹಜ್ಯೋತಿ ಯೋಜನೆಯಿಂದ ಯಾವುದೇ ಹೆಚ್ಚುವರಿ ಹೊರೆ ಆಗಿಲ್ಲ. ಆದರೆ, ಸರ್ಕಾರಿ ಇಲಾಖೆಗಳು ಎಸ್ಕಾಂಗಳಿಗೆ ಪಾವತಿಸಬೇಕಿರುವ 12,631 ಕೋಟಿ ರೂ. ಬಾಕಿಯನ್ನು ಶೀಘ್ರ ಪಾವತಿಸಬೇಕು ಅಥವಾ ಹಣಕಾಸು ಭದ್ರತೆ  ಮೂಲಕ ಪರಿಹರಿಸಬೇಕು ಎಂದು ಇಂಧನ ಸಚಿವ ಕೆ.ಜೆ.ಜಾರ್ಜ್ ಮುಖ್ಯಮಂತ್ರಿಗೆ ಮನವಿ ಮಾಡಿದರು.

ರೈತರ ಅನುಕೂಲಕ್ಕಾಗಿ ರಾಜ್ಯ ಸರ್ಕಾರ ವರ್ಷಕ್ಕೆ 22,000 ಕೋಟಿ ರೂ ಕೃಷಿ ವಿದ್ಯುತ್ ಸಹಾಯಧನ ನೀಡುತ್ತಿದೆ. ಹೀಗಾಗಿ ಫೀಡರ್ ಸೌರೀಕರಣ , ಇಂಧನ-ದಕ್ಷ ಪಂಪ್‌ಸೆಟ್‌ಗಳ ಬಳಕೆ ಹಾಗೂ ಡಿಮ್ಯಾಂಡ್ ಸೈಡ್ ಮ್ಯಾನೇಜ್‌ಮೆಂಟ್  ಕಾರ್ಯಕ್ರಮಗಳನ್ನು ವೇಗಗೊಳಿಸಬೇಕು ಎಂದು ಮುಖ್ಯಮಂತ್ರಿ ಸೂಚಿಸಿದರು.

2035ರ ವೇಳೆಗೆ ರಾಜ್ಯದಲ್ಲಿ ಗರಿಷ್ಠ ವಿದ್ಯುತ್ ಬೇಡಿಕೆ 38 ಗಿಗಾವ್ಯಾಟ್ ತಲುಪುವ ನಿರೀಕ್ಷೆಯಿರುವುದರಿಂದ, ಅದಕ್ಕೆ ತಕ್ಕಂತೆ ವಿದ್ಯುತ್ ಉತ್ಪಾದನಾ ಸಾಮರ್ಥ್ಯ ಹೆಚ್ಚಿಸುವ ಯೋಜನೆ ಹಾಗೂ ಅಗತ್ಯ ಹಣಕಾಸು ನಕ್ಷೆ ಸಿದ್ಧಪಡಿಸಬೇಕು ಎಂದರು.

ಮೀಟರ್‌ಗಳು ಹಾಗೂ ವಿದ್ಯುತ್ ವಿತರಣಾ ವ್ಯವಸ್ಥೆಯ ಆಧುನೀಕರಣಕ್ಕಾಗಿ ಕೇಂದ್ರ ಸರ್ಕಾರದ ನೆರವಿನೊಂದಿಗೆ ಪರಿಷ್ಕೃತ ವಿತರಣಾ ವಲಯ ಯೋಜನೆ ಯನ್ನು ವೇಗವಾಗಿ ಅನುಷ್ಠಾನಗೊಳಿಸಬೇಕು. ಸ್ಮಾರ್ಟ್ ಮೀಟರ್‌ಗಳನ್ನು ಪಾರದರ್ಶಕವಾಗಿ ಹಾಗೂ ನಿಗದಿತ ಸಮಯದಲ್ಲಿ ಅಳವಡಿಸಬೇಕು ಎಂದರು.

ರಾಜ್ಯದಲ್ಲಿ ವೇಗವಾಗಿ ಹೆಚ್ಚುತ್ತಿರುವ ನವೀಕರಿಸಬಹುದಾದ ಇಂಧನ ಸಾಮರ್ಥ್ಯವನ್ನು ಸಮರ್ಪಕವಾಗಿ ನಿಭಾಯಿಸಲು ವಿದ್ಯುತ್ ಜಾಲದ ಮೂಲಸೌಕರ್ಯವನ್ನು ಮತ್ತಷ್ಟು ಬಲಪಡಿಸಬೇಕು. ವಿದ್ಯುತ್ ಪ್ರಸರಣ ಯೋಜನೆಗಳಿಗೆ ಸಂಬಂಧಿಸಿದ ತಾಂತ್ರಿಕ ಸಮಸ್ಯೆಗಳು, ಭೂಸ್ವಾಧೀನ, ಹಕ್ಕುಮಾರ್ಗ  ಹಾಗೂ ಕಾನೂನುಬದ್ಧ ಅನುಮತಿಗಳ ಸಮಸ್ಯೆಗಳನ್ನು ಶೀಘ್ರ ಪರಿಹರಿಸಿ ಯೋಜನೆಗಳನ್ನು ವೇಗಗೊಳಿಸಬೇಕು ಎಂದು ಸೂಚಿಸಿದರು.


Spread the love

About Laxminews 24x7

Check Also

ಮರದ ರೆಂಬೆ ಬಿದ್ದು ಎರಡು ಕಾರುಗಳು ಜಖಂ – ತಪ್ಪಿದ ಭಾರೀ ಅನಾಹುತ

Spread the loveಬೆಂಗಳೂರು: ರಸ್ತೆ ಪಕ್ಕದಲ್ಲಿದ್ದ ಬೃಹತ್‌ ಮರದ ರೆಂಬೆಯೊಂದು ಬಿದ್ದು ಎರಡು ಕಾರು ಹಾಗೂ ಒಂದು ಸ್ಕೂಟಿ ಜಖಂಗೊಂಡ …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ