ಬೆಳಗಾವಿ: ಟ್ರಾನ್ಸ್ಜೆಂಡರ್ ವ್ಯಕ್ತಿಗಳ (ಹಕ್ಕುಗಳ ಸಂರಕ್ಷಣೆ) ತಿದ್ದುಪಡಿ ಮಸೂದೆ-2026ನ್ನು ವಿರೋಧಿಸಿ ನಗರದಲ್ಲಿ ಸೋಮವಾರ ಲಿಂಗತ್ವ ಮತ್ತು ಲೈಂಗಿಕ ಬಹುತ್ವಕ್ಕಾಗಿ ಚಳವಳಿ ನೇತೃತ್ವದಲ್ಲಿ ಶಾಂತಿಯುತ ಪ್ರತಿಭಟನೆ ನಡೆಸಲಾಯಿತು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿ, ಕೆಲಹೊತ್ತು ತಮ್ಮ ಬೇಡಿಕೆಗಳ ಬಗ್ಗೆ ಘೋಷಣೆ ಕೂಗಿದ ಪ್ರತಿಭಟನಕಾರರು ಬಳಿಕ ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಡಿಸಿಗೆ ಮನವಿ ಪತ್ರ ಸಲ್ಲಿಸಿದರು.
ತಿದ್ದುಪಡಿ ಮಸೂದೆ ಲಿಂಗತ್ವ ಅಲ್ಪಸಂಖ್ಯಾತ ಸಮುದಾಯಗಳ ಗೌರವಕ್ಕೆ ಹಾನಿ ಮಾಡುವಂತಿದೆ. ಲಿಂಗತ್ವ ಅಲ್ಪಸಂಖ್ಯಾತರ ಗುರುತಿನ ಸ್ವಯಂ ನಿರ್ಣಯದ ಹಕ್ಕನ್ನು ಕಸಿದುಕೊಳ್ಳುತ್ತಿದೆ. ಸಂವಿಧಾನ ನೀಡಿರುವ ರಕ್ಷಣೆಗಳಿಗೆ ಧಕ್ಕೆಯನ್ನುಂಟು ಮಾಡುವ ಅಂಶಗಳಿದ್ದು, ಕೇಂದ್ರ ಸರ್ಕಾರ ಈ ಕೂಡಲೇ ತಿದ್ದುಪಡಿ ಮರಳಿ ಪಡೆಯಬೇಕು ಎಂದು ಆಗ್ರಹಿಸಿದರು.
ಕರ್ನಾಟಕ ಸರ್ಕಾರ 2017ರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳ ರಾಜ್ಯ ನೀತಿ ರೂಪಿಸಿದೆ. ಇದರಲ್ಲಿ ಲಿಂಗತ್ವ ಅಲ್ಪಸಂಖ್ಯಾತ ವ್ಯಕ್ತಿಗಳನ್ನು ಪೂರ್ಣ ನಾಗರಿಕರಾಗಿ ಒಳಗೊಳ್ಳಲು, ಲಿಂಗತ್ವವನ್ನು ಸ್ವಯಂ ಗುರುತಿಸುವ ವ್ಯವಸ್ಥೆಯನ್ನು ಒದಗಿಸುವುದಾಗಿ ಮತ್ತು ಲಿಂಗತ್ವದ ಆಧಾರದ ಮೇಲೆ ತಾರತಮ್ಯಕ್ಕೊಳಗಾಗದ ಹಕ್ಕು, ಸಾಮಾಜಿಕ ಸ್ಥಳ ಮತ್ತು ಸಂಪನ್ಮೂಲಗಳಿಗೆ ಪ್ರವೇಶ ಹಾಗೂ ಅಭಿವ್ಯಕ್ತಿ ಸ್ವಾತಂತ್ರ್ಯ ಸೇರಿದಂತೆ ಸಂವಿಧಾನಿಕ ಹಕ್ಕುಗಳನ್ನು ಅನುಭವಿಸಲು ಸಬಲೀಕರಿಸುವುದಾಗಿ ಭರವಸೆ ನೀಡಿತ್ತು. ಈಗ ಮಾಡಿರುವ ತಿದ್ದುಪಡಿ ರಾಜ್ಯದ ಈ ಲಿಂಗತ್ವ ಅಲ್ಪಸಂಖ್ಯಾತ ನೀತಿಯಲ್ಲಿ ಉಲ್ಲೇಖಿಸಿದ ತತ್ವಗಳಿಗೆ ವಿರುದ್ಧವಾಗಿದೆ ಎಂದು ಆರೋಪಿಸಿದರು.
Laxmi News 24×7