ಮಡಿಕೇರಿ: ಕೊಡಗು ಜಿಲ್ಲೆಯಲ್ಲಿ ನಿರಂತರ ಮಳೆಯ ಪರಿಣಾಮ ಪೊನ್ನಂಪೇಟೆ ತಾಲೂಕಿನ ಹಾತೂರು ಗ್ರಾಮದ ಬಸವೇಶ್ವರ ಬಡಾವಣೆಗೆ ಸಂಪರ್ಕ ಕಲ್ಪಿಸುವ ಸೇತುವೆ ಸಂಪೂರ್ಣ ಜಲಾವೃತವಾಗಿದ್ದು, ಗ್ರಾಮಸ್ಥರು ಜಲ ದಿಗ್ಬಂಧನಕ್ಕೆ ಸಿಲುಕಿದ್ದಾರೆ.
ಮುಂಗಾರು ಮಳೆ ದಿನೇದಿನೇ ಬಿರುಸು ಪಡೆಯುತ್ತಿದ್ದು, ಹಲವು ಪ್ರದೇಶಗಳಲ್ಲಿ ಜನಜೀವನ ಅಸ್ತವ್ಯಸ್ತವಾಗಿದೆ. ಸೇತುವೆಯ ಮೇಲೆ ಸುಮಾರು ಮೂರು ಅಡಿ ಎತ್ತರದಲ್ಲಿ ನೀರು ಹರಿಯುತ್ತಿರುವುದರಿಂದ ವಾಹನ ಹಾಗೂ ಸಾರ್ವಜನಿಕರ ಸಂಚಾರ ಸಂಪೂರ್ಣ ಸ್ಥಗಿತಗೊಂಡಿದೆ. ಏಕಾಏಕಿ ನೀರಿನ ಮಟ್ಟ ಹೆಚ್ಚಾದ ಕಾರಣ ಗ್ರಾಮಸ್ಥರಲ್ಲಿ ಆತಂಕ ಮನೆಮಾಡಿದ್ದು, ಹೊರಗಿನ ಸಂಪರ್ಕ ಸಂಪೂರ್ಣ ಕಡಿತಗೊಂಡಿದೆ.
ಕೊಡಗು ಜಿಲ್ಲೆಯ ಹಲವು ಭಾಗಗಳಲ್ಲಿ ನದಿ ಮತ್ತು ಹೊಳೆಗಳು ಅಪಾಯದ ಮಟ್ಟದಲ್ಲಿ ಹರಿಯುತ್ತಿವೆ. ಅದರ ಪರಿಣಾಮ ಹಾತೂರು ಗ್ರಾಮದ ಬಸವೇಶ್ವರ ಬಡಾವಣೆಗೆ ಹೋಗುವ ಪ್ರಮುಖ ಸೇತುವೆಯೇ ನೀರಿನಲ್ಲಿ ಮುಳುಗಿದೆ. ಇದರಿಂದ ಗ್ರಾಮಸ್ಥರು ಅಗತ್ಯ ಕೆಲಸಗಳಿಗೂ ಹೊರ ಹೋಗಲು ಸಾಧ್ಯವಾಗದ ಪರಿಸ್ಥಿತಿ ನಿರ್ಮಾಣವಾಗಿದೆ.
ಯಾವುದೇ ಅನಾಹುತ ಸಂಭವಿಸದಂತೆ ಮುಂಜಾಗ್ರತಾ ಕ್ರಮವಾಗಿ ಗೋಣಿಕೊಪ್ಪ ಪೊಲೀಸ್ ಠಾಣೆಯ ಸಿಬ್ಬಂದಿ ಸೇತುವೆಯ ಎರಡೂ ಬದಿಗಳಲ್ಲಿ ಬ್ಯಾರಿಕೇಡ್ ಅಳವಡಿಸಿ ಸಾರ್ವಜನಿಕರ ಸಂಚಾರವನ್ನು ತಡೆದಿದ್ದಾರೆ. ಸೇತುವೆ ದಾಟಲು ಯತ್ನಿಸಬಾರದು ಎಂದು ಅಧಿಕಾರಿಗಳು ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ನೀರಿನ ಮಟ್ಟ ಇಳಿಯುವವರೆಗೆ ಸುರಕ್ಷಿತ ಸ್ಥಳದಲ್ಲೇ ಉಳಿಯುವಂತೆ ಸ್ಥಳೀಯ ಆಡಳಿತ ಸಾರ್ವಜನಿಕರಿಗೆ ಮನವಿ ಮಾಡಿದೆ. ಮುಂದಿನ ಕೆಲ ದಿನಗಳವರೆಗೆ ಮಳೆ ಮುಂದುವರಿಯುವ ಸಾಧ್ಯತೆ ಇರುವುದರಿಂದ ಎಚ್ಚರಿಕೆಯಿಂದ ಇರಲು ಸೂಚಿಸಲಾಗಿದೆ.
Laxmi News 24×7