ಶಿವಮೊಗ್ಗ: ತಾಲೂಕಿನ ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ದಾವಣಗೆರೆ ಮೂಲದ ಬಿಎಸ್ಎನ್ಎಲ್ ನಿವೃತ್ತ ನೌಕರರೊಬ್ಬರು ಸ್ಥಳದಲ್ಲೇ ಮೃತಪಟ್ಟಿರುವ ದುರ್ಘಟನೆ ನಡೆದಿದೆ.
ಮೃತರನ್ನು ದಾವಣಗೆರೆ ನಿವಾಸಿ ಸುರೇಶ್ (65) ಎಂದು ಗುರುತಿಸಲಾಗಿದೆ. ಅಪಘಾತದ ವೇಳೆ ಅವರು ತಮ್ಮ ಮಗನೊಂದಿಗೆ ಮಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಮಾರುತಿ ಸ್ವಿಫ್ಟ್ ಕಾರಿನಲ್ಲಿ ದಾವಣಗೆರೆಗೆ ಮರಳುತ್ತಿದ್ದರು. ಕಾರನ್ನು ಅವರ ಪುತ್ರ ಅಮೃತ್ (36) ಚಾಲನೆ ಮಾಡುತ್ತಿದ್ದರು ಎಂದು ತಿಳಿದುಬಂದಿದೆ. ಅವರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು ಪ್ರಾಣಾಪಾಯದಿಂದ ಪಾರಾಗಿದ್ದಾರೆ.
ಆಯನೂರು–ಸಿರಿಗೆರೆ ರಸ್ತೆಯ ಹೊಸೂರು ದರ್ಗಾ ಸಮೀಪ ತಲುಪುತ್ತಿದ್ದಂತೆ, ಏಕಾಏಕಿ ಕಾರಿನ ನಿಯಂತ್ರಣ ತಪ್ಪಿದೆ. ಪರಿಣಾಮ ರಸ್ತೆ ಬದಿಯಲ್ಲಿದ್ದ ಮೋರಿಗೆ ಕಾರು ಅತಿ ವೇಗದಲ್ಲಿ ಡಿಕ್ಕಿ ಹೊಡೆದಿದೆ. ಅಪಘಾತದ ತೀವ್ರತೆಗೆ ಕಾರಿನ ಮುಂಭಾಗ ಸಂಪೂರ್ಣ ನಜ್ಜುಗುಜ್ಜಾಗಿದ್ದು, ವಾಹನಕ್ಕೂ ಭಾರೀ ಹಾನಿಯಾಗಿದೆ.
ಕೂಡಲೇ ಸ್ಥಳೀಯರು ರಕ್ಷಣೆಗೆ ಧಾವಿಸಿ, ಪೊಲೀಸರಿಗೆ ಮಾಹಿತಿ ನೀಡಿದ್ದರು. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
Laxmi News 24×7