ಕಾರವಾರ:ಜಿಲ್ಲೆಯಲ್ಲಿ ಸತತವಾಗಿ ಕ್ರಿಮಿನಲ್ ಚಟುವಟಿಕೆಗಳಲ್ಲಿ ತೊಡಗಿಸಿಕೊಂಡು ಸಾರ್ವಜನಿಕ ಶಾಂತಿಗೆ ಭಂಗ ತರುತ್ತಿದ್ದ ರೌಡಿ ಅಸಾಮಿಯೊಬ್ಬನನ್ನು ಉತ್ತರ ಕನ್ನಡ ಜಿಲ್ಲೆಯಿಂದ ಆರು ತಿಂಗಳ ಅವಧಿಗೆ ಗಡಿಪಾರು ಮಾಡಿ ಆದೇಶ ಹೊರಡಿಸಲಾಗಿದೆ.
ಕಾರವಾರ ನಗರದ ಕಳಸವಾಡ (ಬಾಡ) ನಿವಾಸಿ ಸೂರ್ಯಕಾಂತ ಕಳಸ ಅಲಿಯಾಸ್ ಜ್ಯಾಕ್ (27) ಎಂಬಾತನೇ ಗಡಿಪಾರಾದ ವ್ಯಕ್ತಿ. ಈತನ ಮೇಲೆ ಕಾರವಾರ ನಗರ ಮತ್ತು ಗ್ರಾಮೀಣ ಪೊಲೀಸ್ ಠಾಣೆಗಳಲ್ಲಿ ಕೊ. ಲೆ ಯತ್ನ, ಹ., ಲ್ಲೆ, ಬೆದರಿಕೆ, ಜೂಜಾಟ ಹಾಗೂ ಎಸ್.ಸಿ/ಎಸ್.ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಸೇರಿದಂತೆ ಒಟ್ಟು 7 ಗಂಭೀರ ಪ್ರಕರಣಗಳು ದಾಖಲಾಗಿವೆ. ಇತ್ತೀಚೆಗೆ 2026ರಲ್ಲಿಯೂ ಬಿ.ಎನ್.ಎಸ್ ಅಡಿಯಲ್ಲಿ ಪ್ರಕರಣ ದಾಖಲಾಗಿದ್ದು, ಈತನ ಚಲನವಲನದ ಮೇಲೆ ನಿಗಾ ಇರಿಸಲಾಗಿತ್ತು.
ರೌಡಿ ಚಟುವಟಿಕೆಗಳನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಕಾರವಾರ ನಗರ ಪೊಲೀಸ್ ನಿರೀಕ್ಷಕರು ಸಲ್ಲಿಸಿದ ಪ್ರಸ್ತಾವನೆಯನ್ನು ಪರಿಶೀಲಿಸಿದ ವಿಶೇಷ ಕಾರ್ಯನಿರ್ವಾಹಕ ದಂಡಾಧಿಕಾರಿಗಳು ಹಾಗೂ ಉತ್ತರ ಕನ್ನಡ ಜಿಲ್ಲಾ ಪೊಲೀಸ್ ಅಧೀಕ್ಷಕರು, ಕರ್ನಾಟಕ ಪೊಲೀಸ್ ಕಾಯ್ದೆ ಅಡಿಯಲ್ಲಿ ಈ ಆದೇಶ ನೀಡಿದ್ದಾರೆ. ಈ ಆದೇಶದನ್ವಯ ಸೂರ್ಯಕಾಂತನನ್ನು 6 ತಿಂಗಳ ಅವಧಿಗೆ ಉತ್ತರ ಕನ್ನಡ ಜಿಲ್ಲೆಯಿಂದ ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾ ವ್ಯಾಪ್ತಿಗೆ ಗಡಿಪಾರು ಮಾಡಲಾಗಿದೆ.
ದಿನಾಂಕ 27-04-2026 ರಂದು ಕಾರವಾರ ನಗರ ಪೊಲೀಸ್ ಠಾಣೆಯ ಸಿಬ್ಬಂದಿಯವರು ಆರೋಪಿ ಸೂರ್ಯಕಾಂತ ಜ್ಯಾಕ್ನನ್ನು ಚಿಕ್ಕಮಂಗಳೂರು ಜಿಲ್ಲೆಯ ಅಜ್ಜಂಪುರ ಪೊಲೀಸ್ ಠಾಣಾಧಿಕಾರಿಗಳ ಮುಂದೆ ಹಾಜರುಪಡಿಸಿ, ಗಡಿಪಾರು ಪ್ರಕ್ರಿಯೆಯನ್ನು ಪೂರ್ಣಗೊಳಿಸಿದ್ದಾರೆ. ಜಿಲ್ಲೆಯಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವ ನಿಟ್ಟಿನಲ್ಲಿ ಪೊಲೀಸರು ಈ ಕಠಿಣ ಕ್ರಮ ಕೈಗೊಂಡಿದ್ದಾರೆ.
Laxmi News 24×7