ಘಟಪ್ರಭಾ: ಪಟ್ಟಣದ ಡಾ.ಎನ್.ಎಸ್. ಹರ್ಡೀಕರ್ ಸೇವಾದಳ ತರಬೇತಿ ಕೇಂದ್ರದಲ್ಲಿ ಮುಂದಿನ ಬಾರಿ ಗಣರಾಜ್ಯೋತ್ಸವಕ್ಕೆ ರಾಷ್ಟ್ರೀಯ ನಾಯಕರನ್ನು ಕರೆಸಿ ಧ್ವಜಾರೋಹಣ ನೆರವೇರಿಸಲಾಗುವುದು ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಸತೀಶ ಜಾರಕಿಹೊಳಿ ತಿಳಿಸಿದರು.
ಮಂಗಳವಾರ ಧ್ವಜಾರೋಹಣದ ಬಳಿಕ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೇವಾದಳ ತರಬೇತಿ ಕೇಂದ್ರದಲ್ಲಿ ರಾಷ್ಟ್ರೀಯ ದಿನಗಳು ಸೇರಿ ವಿವಿಧ ಕಾರ್ಯಕ್ರಮಗಳನ್ನು ಆಯೋಜಿಸಲಾಗುತ್ತಿದೆ. ಮುಂದಿನ ದಿನಗಳಲ್ಲಿ ಇನ್ನೂ ವಿಭಿನ್ನ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗುವುದು ಎಂದು ಹೇಳಿದರು.
“ಸ್ವಾತಂತ್ರ್ಯ ಹೋರಾಟದಲ್ಲಿ ಹರ್ಡೀಕರ್ ಅವರ ನೇತೃತ್ವದಲ್ಲಿ ಸೇವಾದಳದ ಕಾರ್ಯಕರ್ತರು ಭಾಗವಹಿಸಿ ಅನೇಕ ಹೋರಾಟಗಳನ್ನು ಮಾಡಿದ್ದರು. ಸೇವಾದಳ ತನ್ನದೇ ಆದ ಮಹತ್ವವನ್ನು ಹೊಂದಿದ್ದು, ಉತ್ತಮ ವ್ಯಕ್ತಿತ್ವ ರೂಪಿಸಿಕೊಳ್ಳಲು ಸೇವಾದಳ ಒಂದು ಅತ್ಯುತ್ತಮ ವೇದಿಕೆಯಾಗಿದೆ. ಈ ನಿಟ್ಟಿನಲ್ಲಿ ಕಾರ್ಯಕರ್ತರನ್ನು ವಿವಿಧ ರೀತಿಯಲ್ಲಿ ಸಜ್ಜುಗೊಳಿಸಲಾಗುತ್ತಿದೆ ಎಂದರು.
ಸರ್ಕಾರದ ಗಮನ ಸೆಳೆಯಲು ಪರೇಡ್:
ಕೃಷಿ ಮಸೂದೆಗಳನ್ನು ಹಿಂಪಡೆಯುವಂತೆ ಸರ್ಕಾರದ ಗಮನ ಸೆಳೆಯಲು ರೈತರು ದೆಹಲಿ ಸೇರಿದಂತೆ ದೇಶದ ಇತರೆಡೆ ಟ್ರ್ಯಾಕ್ಟರ್ ಪರೇಡ್ ನಡೆಸುತ್ತಿದ್ದಾರೆ ಹೊರತು ಗಣರಾಜ್ಯೋತ್ಸವ ಪರೇಡಗೆ ಧಕ್ಕೆ ತರುವ ಉದ್ದೇಶದಿಂದಲ್ಲ. ಗಣರಾಜ್ಯೋತ್ಸವ ಪರೇಡ್ ಹಾಗೂ ಟ್ರ್ಯಾಕ್ಟರ್ ಪರೇಡ್ ಎರಡು ಬೇರೆ ಬೇರೆ ಸ್ಥಳಗಳಲ್ಲಿ ನಡೆಯುತ್ತಿವೆ ಎಂದು ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದರು.
ಜಿಲ್ಲೆಯಲ್ಲಿ ವಿವಿಧ ಕಾರ್ಯಕ್ರಮಗಳಲ್ಲಿ ತೊಡಗಿರುವುದರಿಂದ ಬೆಂಗಳೂರಿನಲ್ಲಿ ನಡೆಯುತ್ತಿರುವ ಟ್ರ್ಯಾಕ್ಟರ್ ಪರೇಡನಲ್ಲಿ ಭಾಗವಹಿಸಲು ಸಾಧ್ಯವಾಗಿಲ್ಲ. ಮುಂದಿನ ದಿನಗಳಲ್ಲಿ ಜಿಲ್ಲೆ, ತಾಲೂಕು ಹಾಗೂ ಗ್ರಾಮ ಮಟ್ಟದಲ್ಲಿಯೂ ರೈತರ ಟ್ರ್ಯಾಕ್ಟರ್ ಪರೇಡ್ ನಡೆಯಲಿದೆ ಎಂದು ತಿಳಿಸಿದರು.