ಬೆಂಗಳೂರು: ಅಹಿಂದ ನಾಯಕ ಸಿದ್ದರಾಮಯ್ಯ ರಾಜಕೀಯ ಬದುಕಿನ ಮಹತ್ವದ ಅಧ್ಯಾಯಕ್ಕೆ ತೆರೆ ಬೀಳುತ್ತಿದೆ. ಕಾಂಗ್ರೆಸ್ನಲ್ಲಿ ಎರಡನೇ ಅವಧಿಗೆ ಮುಖ್ಯಮಂತ್ರಿ ಆಗಿದ್ದ ಸಿದ್ದರಾಮಯ್ಯ ಇಂದು ತಮ್ಮ ಸ್ಥಾನಕ್ಕೆ ರಾಜೀನಾಮೆ ಕೊಡ್ತಿದ್ದಾರೆ. ರಾಜ್ಯದ ಒಬ್ಬ ಟಾಪ್ ಮಾಸ್ ಲೀಡರ್ ಆಗಿದ್ದ ಸಿದ್ದರಾಮಯ್ಯ ಅಧಿಕಾರ ರಾಜಕೀಯ ಈ ನಿರ್ಗಮನದೊಂದಿಗೆ ಕೊನೆಗೊಳ್ತಿದೆ.
ಕಳೆದೆರಡು ದಿನಗಳಿಂದ ಕಾಂಗ್ರೆಸ್ನಲ್ಲಿ ನಡೆಯುತ್ತಿರುವ ಬಿರುಸಿನ ವಿದ್ಯಮಾನಗಳು ನಿರ್ಣಾಯಕ ಘಟ್ಟಕ್ಕೆ ಬಂದು ನಿಂತಿವೆ. ಮೊದಲೇ ನಿರ್ಣಯಿಸಿದಂತೆ ಇಂದು ಸಿದ್ದರಾಮಯ್ಯ ತಮ್ಮ ಸಿಎಂ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸಲಿದ್ದಾರೆ. ಈಗಾಗಲೇ ರಾಜ್ಯಪಾಲರ ಭೇಟಿಗೆ ಸಮಯ ಕೇಳಿದ್ದಾರೆ ಎನ್ನಲಾಗಿದೆ.
ಇದಕ್ಕೂ ಮುನ್ನ ಒಂದಷ್ಟು ಬೆಳವಣಿಗೆಗಳಿಗೆ ಸಿಎಂ ಸರ್ಕಾರಿ ನಿವಾಸ ಕಾವೇರಿ ಸಾಕ್ಷಿ ಆಗ್ತಿದೆ. ಮುಖ್ಯಮಂತ್ರಿಗಳು ಇಂದು ಬೆಳಗ್ಗೆ ತಮ್ಮ ನಿವಾಸದಲ್ಲಿ ಬ್ರೇಕ್ಫಾಸ್ಟ್ ಮೀಟಿಂಗ್ ಕರೆದಿದ್ದಾರೆ. ಈ ಸಭೆಗೆ ಎಲ್ಲ ಸಚಿವರಿಗೂ ಆಹ್ವಾನಿಸಲಾಗಿದೆ. ಎಲ್ಲಾ ಸಚಿವರಿಗೂ ಮುಖ್ಯಮಂತ್ರಿ ಕಚೇರಿಯಿಂದ ಸಂದೇಶ ರವಾನೆಯಾಗಿದೆ. ಉಸ್ತುವಾರಿ ರಣದೀಪ್ಸಿಂಗ್ ಸುರ್ಜೇವಾಲ, ಡಿಸಿಎಂ ಡಿಕೆ ಶಿವಕುಮಾರ್ ಕೂಡಾ ಭಾಗಿಯಾಗ್ತಿದ್ದಾರೆ. ಈ ಸಭೆಯಲ್ಲಿ ಸಿದ್ದರಾಮಯ್ಯ ತಮ್ಮ ವಿದಾಯ ಭಾಷಣ ಮಾಡಲಿದ್ದಾರೆ. ತಮ್ಮ ರಾಜೀನಾಮೆ ಬಗ್ಗೆ ಸಿಎಂ ಘೋಷಣೆ ಮಾಡಲಿದ್ದಾರೆ.
ಬ್ರೇಕ್ಫಾಸ್ಟ್ ಸಭೆ ಬಳಿಕ ಅಥವಾ ರಾಜೀನಾಮೆ ಬಳಿಕ ಸಿದ್ದರಾಮಯ್ಯ ಸುದ್ದಿಗೋಷ್ಠಿ ನಡೆಸಲಿದ್ದಾರೆ. ಈ ಸುದ್ದಿಗೋಷ್ಠಿಯಲ್ಲಿ ತಮ್ಮ ರಾಜೀನಾಮೆ ಅಗತ್ಯದ ಬಗ್ಗೆ ರಾಜ್ಯದ ಜನತೆಗೆ ವಿವರಣೆ ಕೊಡುವ ಸಾಧ್ಯತೆ ಇದೆ. ಎರಡು ದಿನಗಳ ಕ್ಷಿಪ್ರ ರಾಜಕೀಯ ಬೆಳವಣಿಗೆ ಬಳಿಕ ಮೊದಲ ಬಾರಿಗೆ ಸಿಎಂ ಮಾಧ್ಯಮಗಳನ್ನು ಈ ಸುದ್ದಿಗೋಷ್ಠಿ ಮೂಲಕ ಎದುರಿಸಲಿದ್ದಾರೆ.
ಇತ್ತ ಆಪ್ತ ಸಚಿವರು ಸಿದ್ದರಾಮಯ್ಯರನ್ನು ನಾನಾ ರೀತಿಯಲ್ಲಿ ನಿರ್ಧಾರ ಬದಲಿಸುವಂತೆ ಒತ್ತಡ ಹೇರುತ್ತಿದ್ದಾರೆ. ಆದ್ರೆ ಸಿದ್ದರಾಮಯ್ಯ ಮಾತ್ರ ಯಾವುದೇ ಆಪ್ತರ ಒತ್ತಡಕ್ಕೆ ಮಣಿಯುತ್ತಿಲ್ಲ, ಹೈಕಮಾಂಡ್ಗೆ ಕೊಟ್ಟ ಮಾತಿಗೆ ಬದ್ಧನಾಗಿರುತ್ತೇನೆ. ರಾಜ್ಯಪಾಲರನ್ನು ಭೇಟಿ ಮಾಡಿ, ರಾಜೀನಾಮೆ ನೀಡುತ್ತೆನೆಂದು ಆಪ್ತರಿಗೆ ಖಡಕ್ಕಾಗಿ ಸ್ಪಷ್ಟಪಡಿಸಿದ್ದಾರೆ ಎನ್ನಲಾಗಿದೆ.
ಇನ್ನು, ಸಿದ್ದರಾಮಯ್ಯ ರಾಜೀನಾಮೆ ಬಳಿಕ ಇಂದು ಸಂಜೆ ಅಥವಾ ನಾಳೆ ಬೆಳಗ್ಗೆ ಕಾಂಗ್ರೆಸ್ ಶಾಸಕಾಂಗ ಸಭೆ ನಡೆಯಲಿದೆ. ಅಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆಯಾಗುತ್ತದೆ. ಶಾಸಕಾಂಗ ಸಭೆಯಲ್ಲಿ ಅಧಿಕೃತವಾಗಿ ಸಿದ್ದರಾಮಯ್ಯ ರಾಜೀನಾಮೆಯನ್ನು ಪ್ರಕಟಿಸಲಿದ್ದಾರೆ. ಹೈಕಮಾಂಡ್ ಮುಂದಿನ ಶಾಸಕಾಂಗ ನಾಯಕನಾಗಿ ಡಿಕೆ ಶಿವಕುಮಾರ್ ಹೆಸರನ್ನು ಸೂಚ್ಯವಾಗಿ ಮಾಹಿತಿ ನೀಡಲಿದೆ. ಶಾಸಕಾಂಗ ಸಭೆಯಲ್ಲಿ ಹೈಕಮಾಂಡ್ ತೀರ್ಮಾನಕ್ಕೆ ಬದ್ಧ ಎಂಬ ನಿರ್ಣಯ ಅಂಗೀಕರಿಸುವ ಸಾಧ್ಯತೆ ಇದೆ.
Laxmi News 24×7