Breaking News
Home / ಜಿಲ್ಲೆ / ಬೆಂಗಳೂರು / ಪರಿಹಾರ ನಿಧಿಗೆ ಬಂದ ಹಣದ ಖರ್ಚು-ವೆಚ್ಚ ಕುರಿತು ಶ್ವೇತ ಪತ್ರ ಹೊರಡಿಸಬೇಕು : ವಿಪಕ್ಷಗಳ ಒತ್ತಾಯ

ಪರಿಹಾರ ನಿಧಿಗೆ ಬಂದ ಹಣದ ಖರ್ಚು-ವೆಚ್ಚ ಕುರಿತು ಶ್ವೇತ ಪತ್ರ ಹೊರಡಿಸಬೇಕು : ವಿಪಕ್ಷಗಳ ಒತ್ತಾಯ

Spread the love

ಬೆಂಗಳೂರು, ಮೇ 8- ಸಂಘಟಿತ ಮತ್ತು ಅಸಂಘಟಿತ ಕಾರ್ಮಿಕರಿಗೆ ಮಾಸಿಕ 10 ಸಾವಿರ ರೂಪಾಯಿ ನೀಡಬೇಕು, ರೈತರ ಉತ್ಪನ್ನಗಳನ್ನು ಸರ್ಕಾರವೇ ಖರೀದಿಸಬೇಕು, ಪಿಎಂ ಕೇರ್ ನಿಧಿಗೆ ಪಾವತಿಯಾಗಿರುವ ಹಣವನ್ನು ಹಿಂಪಡೆಯಬೇಕು ಹಾಗೆಯೇ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಲಾಗಿರುವ ಹಣದ ಖರ್ಚು ವೆಚ್ಚದ ಕುರಿತು ಶ್ವೇತ ಪತ್ರ ಹೊರಡಿಸಬೇಕು ಎಂದು ವಿರೋಧ ಪಕ್ಷಗಳು ರಾಜ್ಯ ಸರ್ಕಾರವನ್ನು ಒತ್ತಾಯಿಸಿವೆ.

ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ ಅವರ ನೇತೃತ್ವದಲ್ಲಿ ವಿರೋಧ ಪಕ್ಷಗಳ ಮುಖಂಡರು ಇಂದು ಮುಖ್ಯಮಂತ್ರಿ ಯಡಿಯೂರಪ್ಪ ಅವರನ್ನು ಭೇಟಿ ಮಾಡಿ ಹತ್ತಾರು ಬೇಡಿಕೆಗಳ ಹಕ್ಕೋತ್ತಾಯ ಪತ್ರವನ್ನು ಸಲ್ಲಿಸಿ, ಕೊರೊನಾ ಪರಿಸ್ಥಿತಿಯಲ್ಲಿ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಚರ್ಚೆ ನಡೆಸಿದರು.

ಕೊರೋನಾ ರೋಗ ನಿವಾರಣೆ ಹಾಗೂ ಲಾಕ್ಡೌನ್ನಿಂದಾಗಿ ಉಂಟಾಗಿರುವ ಜನರ ಸಂಕಷ್ಟಗಳನ್ನು ನಿವಾರಿಸಲು ಕೇಂದ್ರ ಸರ್ಕಾರ ಕರ್ನಾಟಕ ರಾಜ್ಯಕ್ಕೆ ಕನಿಷ್ಟ 50,000 ಕೋಟಿ ರೂಪಾಯಿಗಳಗ ವಿಶೇಷ ಆರ್ಥಿಕ ಪ್ಯಾಕೇಜನ್ನು ನೀಡುವಂತೆ ರಾಜ್ಯ ಸರ್ಕಾರ ಒತ್ತಾಯಿಸಬೇಕು.

ರಾಜ್ಯವ್ಯಾಪಿ ರೈತರು ಬೆಳೆದಿರುವ ಹೂವು, ಹಣ್ಣು, ತರಕಾರಿ ಹಾಗೂ ಬೆಳೆಗಳ ಕಟಾವಿಗೆ ಅವಕಾಶ ಕಲ್ಪಿಸುವುದು ಮತ್ತು ಮಾರಾಟ ಮಾಡಲು ಸೂಕ್ತ ಸಾರಿಗೆ ವ್ಯವಸ್ಥೆ ಮತ್ತು ಮಾರುಕಟ್ಟೆ ಒದಗಿಸಬೇಕು. ರೈತರು ಬೆಳೆದಿರುವ ಸದರಿ ಪದಾರ್ಥಗಳನ್ನು ವ್ಯಾಪಾರಸ್ಥರು ತೆಗೆದುಕೊಳ್ಳದೆ ಇದ್ದ ಸಂದರ್ಭದಲ್ಲಿ ಸರ್ಕಾರವೇ ರೈತರ ಹೊಲದಿಂದ ನೇರವಾಗಿ ಬೆಳೆದ ಪದಾರ್ಥಗಳನ್ನು ಖರೀದಿಸಿ, ರೈತರಿಗೆ ಸಹಾಯ ಮಾಡಬೇಕು ಎಂದು ಸಲಹೆ ನೀಡಿದ್ದಾರೆ.

ಲಾಕ್ಡೌನ್ ಅವಧಿಯಲಿ ನಷ್ಟ ಅನುಭವಿಸಿರುವ ರೈತರಿಗೆ ನಷ್ಟ ಪರಿಹಾರ ನೀಡುವುದು ಹಾಗೆಯೆ ಕೋಳಿ ಸಾಕಾಣಿಕೆ ಮಾಡಿ ಮಾರಾಟವಾಗದೆ ನಷ್ಟ ಅನುಭವಿಸಿರುವ ರೈತರಿಗೂ ಸಹ ಸೂಕ್ತ ನಷ್ಟ ಪರಿಹಾರ ನೀಡಬೇಕು. ರೈತರು ಬೆಳೆದ ಬೆಳೆ, ತರಕಾರಿ, ಹಣ್ಣು, ಹೂವು, ಪೌಲ್ಟ್ರಿ, ರೇಷ್ಮೆ ಮುಂತಾದ ಉತ್ಪನ್ನಗಳನ್ನು ಬೆಳೆದು ರೈತರು ನಷ್ಟದ ಕುರಿತು ವೈಜ್ಞಾನಿಕ ಸಮೀಕ್ಷೆಯನ್ನು ನಡೆಸಿ, ನ್ಯಾಯೋಚಿತವಾಗಿ ಕನಿಷ್ಟ ಶೇ.50% ರಷ್ಟು ಪರಿಹಾರವನ್ನು ಸಮರೋಪಾದಿಯಲ್ಲಿ ನೀಡಬೇಕು

ರೈತರು ಬೆಳೆದ ಪ್ರತಿ ಪದಾರ್ಥಗಳಿಗೂ ಉತ್ಪಾದನಾ ವೆಚ್ಚವನ್ನು ಆಧರಿಸಿ, ನಿಗದಿತ ಬೆಲೆಯನ್ನು ತುರ್ತಾಗಿ ನಿಗದಿ ಮಾಡುವುದು. ನಿಗದಿ ಮಾಡಿದ ದರಗಳಿಗಿಂತ ಬೆಲೆ ಕಡಿಮೆಯಾದರೆ ಸರ್ಕಾರವು ಮಧ್ಯ ಪ್ರವೇಶ ಮಾಡಿ ಪ್ರೋತ್ಸಾಹ ಧನ/ಬೆಂಬಲ ಬೆಲೆ ನೀಡಲು 5000 ಕೋಟಿ ರೂಗಳ ಆವರ್ತ ನಿಧಿಯನ್ನು ಸ್ಥಾಪಿಸಿ, ಆ ನಿಧಿಯನ್ನು ಬಳಸಿ ಎ.ಪಿ.ಎಂ.ಸಿ.ಗಳ ಮೂಲಕ ರೈತರ ಉತ್ಪನ್ನಗಳನ್ನು ಖರೀದಿಸಲು ಗ್ರಾಮ ಪಂಚಾಯತಿ ಮಟ್ಟದಲ್ಲಿ ಖರೀದಿ ಕೇಂದ್ರಗಳನ್ನು ತೆರೆಯಬೇಕು ಎಂದು ಒತ್ತಾಯಿಸಿದ್ದಾರೆ.

ಸರ್ಕಾರ ಈ ಕೂಡಲೇ ಬರಪೀಡಿತ ತಾಲ್ಲೂಕುಗಳಿಗೆ ನೀಡಬೇಕಾದ ಸವಲತ್ತುಗಳನ್ನು ನೀಡುವುದು. ಬರಗಾಲದಿಂದ ನಷ್ಟವಾಗಿರುವ ಬೆಳೆಗಳಿಗೂ ಸರ್ಕಾರ ಪರಿಹಾರ ನೀಡಬೇಕು. ಪೂರ್ವ ಮುಂಗಾರಿನ ಆಲಿಕಲ್ಲು ಸಹಿತ ಬಿರುಗಾಳಿ ಮಳೆಗೆ ಭತ್ತ, ಬಾಳೆ, ದ್ರಾಕ್ಷಿ, ಮಾವು, ಟೊಮೆಟೊ ಮುಂತಾದ ಬೇಸಿಗೆಯ ಬೆಳೆಗಳು ತೀವ್ರ ರೀತಿಯ ಹಾನಿಗೆ ಒಳಗಾಗಿವೆ.

ಹಾನಿಗೊಳಗಾದ ಪ್ರದೇಶ ಎಷ್ಟು ಎಂಬುದರ ಕುರಿತು ಸಮರ್ಪಕವಾಗಿ ಜಂಟಿ ಸರ್ವೆ ನಡೆಸಬೇಕು ಮತ್ತು ಪ್ರತಿ ಹೆಕ್ಟೆರ್ಗೆ ನೀಡುತ್ತಿರುವ ಪರಿಹಾರ ಮೊತ್ತವಾದ 13,500 ರೂ.ಗಳನ್ನು ಈ ಹಿಂದೆ ನೀಡಿದಂತೆ 25,000 ರೂ.ಗಳಿಗೆ ಹೆಚ್ಚಿಸಬೇಕು.

ರಾಜ್ಯದಲ್ಲಿ ರೈತರಿಗೆ ಪಾವತಿಸಬೇಕಾದ ಕಬ್ಬಿನ ಬಾಕಿ ಹಣ ಸುಮಾರು 3 ಸಾವಿರ ಕೋಟಿ ರೂ.ಗಳನ್ನು ತುರ್ತಾಗಿ ಪಾವತಿಸುವಂತೆ ಆದೇಶ ಮಾಡಬೇಕು. ತೊಗರಿ ಬೆಳೆಗಾರರಿಗೆ ಬಾಕಿ ಹಣವನ್ನು ರೈತರಿಗೆ ಬಿಡುಗಡೆ ಮಾಡಬೇಕು. ಎಲ್ಲ ಸಹಕಾರಿ/ವಾಣಿಜ್ಯ ಬ್ಯಾಂಕ್ಗಳು ಮತ್ತು ಹಣಕಾಸು ಸಂಸ್ಥೆಗಳಿಗೆ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳೆರಡೂ ಕನಿಷ್ಟ 10 ಸಾವಿರ ಕೋಟಿ ರೂ.ಗಳನ್ನು ಬಿಡುಗಡೆ ಮಾಡಿ, ರೈತರಿಗೆ ಸಾಲ ಸೌಲಭ್ಯ ಒದಗಿಸಬೇಕು.

ರೈತರಿಗೆ ಬೇಕಾದ ಬಿತ್ತನೆ ಬೀಜ, ಗೊಬ್ಬರ, ಅಗತ್ಯ ಔಷಧಿ ಹಾಗೂ ಇತರೇ ಸಲಕರಣೆಗಳನ್ನು ರೈತರಿಗೆ ಉಚಿತವಾಗಿ ನೀಡಬೇಕು ಎಂದು ಒತ್ತಾಯಿಸಲಾಗಿದೆ.
ವಿವಿಧ ಬ್ಯಾಂಕುಗಳಲ್ಲಿ ರೈತರಿಗೆ ನೀಡಿರುವ ಸಾಲ ವಸೂಲಾತಿ ಕೊರೋನ ಅವಧಿ ಮುಗಿಯುವವರೆಗೂ ಷರತ್ತು ರಹಿತವಾಗಿ ಮುಂದೂಡಲು ಹಾಗೂ ಈ ಅವಧಿಯ ಸಾಲದ ಮೇಲಿನ ಬಡ್ಡಿಯನ್ನು ಮನ್ನಾ ಮಾಡಬೇಕು.

ಲಾಕ್ಡೌನ್ ಕಾರಣದಿಂದ ಉದ್ಯೋಗ ಖಾತ್ರಿ ಯೋಜನೆಯಲ್ಲಿ ಉದ್ಯೋಗ ನಿರ್ವಹಿಸಲು ಸಾಧ್ಯವಾಗದ ಅವಧಿಗೆ ನೋಂದಾಯಿತ ಕಾರ್ಮಿಕರಿಗೆ ನಿಗದಿತ ವೇತನವನ್ನು ಕಡ್ಡಾಯವಾಗಿ ನೀಡಲು ಕ್ರಮವಹಿಸುವುದು. ಸಾಂಪ್ರದಾಯಿಕ ವೃತ್ತಿ ನಡೆಸುವವರು, ಸಿನಿಮಾ, ಟಿ.ವಿ., ಧಾರವಾಹಿಗಳಲ್ಲಿ ಕೆಲಸ ಮಾಡುವ ಕಲಾವಿದರು, ಕಾರ್ಮಿಕರು ಮತ್ತು ವಿವಿಧ ಮಾಧ್ಯಮಗಳಲ್ಲಿ ಕೆಲಸ ಮಾಡುವ ಕಾರ್ಮಿಕರು.

ಮತ್ತು ಬೀದಿ ಬದಿಯ ವ್ಯಾಪಾರಿಗಳು, ಅಲೆಮಾರಿ ಸಮುದಾಯಗಳು, ಮಂಗಳಮುಖಿಯರು, ದೇವದಾಸಿಯರು, ಅಂಗವಿಕಲರು, ಪ್ಲಾಂಟೇಶನ್ ಕಾರ್ಮಿಕರು, ಟಾಂಗಾ ಚಾಲಕರು, ದರ್ಜಿಗಳ, ಪೋಟೋಗ್ರಾಫರ್ಗಳು, ಆಟೋ, ಕ್ಯಾಬ್, ಟ್ರಕ್, ಲಾರಿ, ಮುಂತಾದ ವಾಹನ ಚಾಲಕರು, ಕ್ಲೀನರ್ಗಳು, ಅಡುಗೆ ಕೆಲಸದವರು, ಹಮಾಲಿಗಳು, ಪೌರ ಕಾರ್ಮಿಕರು, ದೇವಸ್ಥಾನದ ಅರ್ಚಕರುಗಳು, ಸಣ್ಣಪುಟ್ಟ ವ್ಯಾಪಾರಸ್ಥರುಗಳಿಗೆ ಮತ್ತು ಕಟ್ಟಡ ಕಾರ್ಮಿಕರು, ಗಾರ್ಮೆಂಟ್ಸ್ ಕಾರ್ಮಿಕರು, ಮನೆ ಕೆಲಸದವರು, ನರೇಗಾ ಕಾರ್ಮಿಕರು, ಕೃಷಿ ಕೂಲಿ ಕಾರ್ಮಿಕರು ಮುಂತಾದ ಎಲ್ಲಾ ರೀತಿಯ ಕಾರ್ಮಿಕರಿಗೆ ಕೊರೊನಾ ಮುಗಿಯುವವರೆಗೆ ಪ್ರತಿ ತಿಂಗಳು ಹತ್ತು ಸಾವಿರ ರೂ. ನೀಡಬೇಕು ಎಂದು ಒತ್ತಾಯಿಸಿದ್ದಾರೆ.

ಸಂಘಟಿತ, ಅಸಂಘಟಿತ ವಲಯದ ಕಾರ್ಮಿಕರಿಗೂ ಪ್ರತಿ ತಿಂಗಳು ಹತ್ತು ಸಾವಿರ ರೂ. ನೀಡುವುದು. ಜಾನುವಾರುಗಳಿಗೆ ಉಚಿತವಾಗಿ ಹಿಂಡಿ, ಬೂಸಾ, ಮೇವು ಮತ್ತು ಪಶು ಆಹಾರಗಳನ್ನು ಉಚಿತವಾಗಿ ನೀಡಲು ಸರ್ಕಾರ ವಿಶೇಷ ಪ್ಯಾಕೇಜ್ನ್ನು ರೂಪಿಸಬೇಕು. ವಿವಿಧ ಕಾರಣಗಳಿಂದ ಮರಣ ಹೊಂದುವ ಕುರಿ, ಮೇಕೆ, ಹಸು, ಎತ್ತು, ಎಮ್ಮೆ ಮುಂತಾದವುಗಳಿಗೆ 5 ರಿಂದ 10 ಸಾವಿರ ರೂ.ಗಳನ್ನು ಅನುಗ್ರಹ ಯೋಜನೆಯಡಿ ಪರಿಹಾರ ನೀಡಲಾಗುತ್ತಿತ್ತು.

ಇದನ್ನು ಸರ್ಕಾರ ಇತ್ತೀಚಿಗೆ ನಿಲ್ಲಿಸಿದೆ. ರೈತರ ಹಿತದೃಷ್ಟಿಯಿಂದ ಸದರಿ ಯೋಜನೆಯನ್ನು ಮುಂದುವರೆಸಿ ಮರಣ ಹೊಂದಿದ ಜಾನುವಾರುಗಳಿಗೆ ಪರಿಹಾರ ನೀಡಬೇಕು ಎಂದು ಒತ್ತಾಯಿಸಿದ್ದಾರೆ.ನೇಕಾರರಿಗೆ ಘೋಷಣೆ ಮಾಡಿರುವ ಪ್ಯಾಕೇಜ್ ನಲ್ಲಿ ಕಂಬಳಿ ನೇಕಾರರ ಸೇರ್ಪಡೆ ಮಾಡಬೇಕು, ಸಂಕಷ್ಟದಲ್ಲಿರುವ ಸೂಕ್ಷ್ಮ, ಅತಿಸೂಕ್ಷ್ಮ, ಸಣ್ಣ, ಮಧ್ಯಮ ಕೈಗಾರಿಕೆಗಳಿಗೆ ರೂ.10 ಸಾವಿರ ಕೋಟಿಗಳ ವಿಶೇಷ ಪ್ಯಾಕೇಜನ್ನು ನೀಡಿ ಉದ್ಯೋಗಾವಕಾಶಗಳನ್ನು ಹೆಚ್ಚಿಸಲು ಬೇಕಾದ ಪೂರಕ ವಾತಾವರಣವನ್ನು ನಿರ್ಮಾಣ ಮಾಡಬೇಕು.

ಶೇ.4ರ ಬಡ್ಡಿದರದಲ್ಲಿ ಸಾಲ ನೀಡುವುದು, ಕಚ್ಚಾ ವಸ್ತುಗಳ ಬೆಲೆ ಏರಿಕೆ ಆಗದಂತೆ ನೋಡಿಕೊಳ್ಳುವುದು, ವಿದ್ಯುಚ್ಛಕ್ತಿಯ ದರಗಳನ್ನು ಸಂಪೂರ್ಣ ಮನ್ನಾ ಮಾಡುವುದು. ನಮ್ಮ ರಾಜ್ಯದಿಂದ ಪಿ.ಎಂ.ಕೇರ್ಸ್ ನಿಧಿಗೆ ಹೋಗಿರುವ ಎಲ್ಲಾ ಹಣವನ್ನು ಮರಳಿ ರಾಜ್ಯಕ್ಕೆ ನೀಡುವಂತೆ ಒತ್ತಾಯಿಸುವುದು. ಅಷ್ಟೇ ಅಲ್ಲದೆ ಮುಖ್ಯಮಂತ್ರಿ ಪರಿಹಾರ ನಿಧಿ ಖಾತೆಗೆ ಇಲ್ಲಿಯವರೆಗೆ ಎಷ್ಟು ಹಣ ಬಂದಿದೆ? ಇದನ್ನು ಯಾವ, ಯಾವ ಬಾಬತ್ತಿಗಾಗಿ ಖರ್ಚು ಮಾಡಲಾಗಿದೆ? ಉಳಿಕೆ ಎಷ್ಟು ಹಣ ಲಭ್ಯವಿದೆ? ಎಂಬ ಮಾಹಿತಿಯನ್ನು ‘ಶ್ವೇತ ಪತ್ರ’ ಹೊರಡಿಸಬೇಕು ಎಂದು ಲೆಕ್ಕ ಕೇಳಿದ್ದಾರೆ.

ಆಹಾರ ಪದಾರ್ಥಗಳ ಕಿಟ್ ವಿತರಣೆಯಲ್ಲಿ ಆಗಿರುವ ಭ್ರಷ್ಟಾಚಾರದ ಬಗ್ಗೆ ತನಿಖೆಯಾಗಬೇಕು ಎಂದು ಒತ್ತಾಯಿಸಿದ್ದಾರೆ. ಪ್ರತಿಪಕ್ಷದ ನಾಯಕ ಸಿದ್ದರಾಮಯ್ಯ, ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ವಿಪಕ್ಷ ನಾಯಕ ಎಸ್.ಆರ್.ಪಾಟೀಲ್, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಕೆ.ಕುಮಾರಸ್ವಾಮಿ, ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ, ಸಲೀಂ ಅಹಮದ್, ಸಿಪಿಎಂ ನಾಯಕರಾದ ಜಿ.ಎನ್.ನಾಗರಾಜ್, ರೈತ ಸಂಘದ ಅಧ್ಯಕ್ಷ ಕೋಡಿಹಳ್ಳಿ ಚಂದ್ರಶೇಖರ್ ಸೇರಿ ಸರ್ಕಾರದ ಹಲವಾರು ಸಚಿವರು ಸಭೆಯಲ್ಲಿ ಭಾಗವಿಸಿದ್ದರು.


Spread the love

About Laxminews 24x7

Check Also

ಚಿದಾನಂದ ಸವದಿ‌ಗೆ ಚಿಕ್ಕೋಡಿ ಕ್ಷೇತ್ರಕ್ಕೆ ಟಿಕೆಟ್ ನೀಡುವ ಸಾಧ್ಯತೆ

Spread the loveಬೆಳಗಾವಿ, : ಲೋಕಸಭಾ ಚುನಾವಣೆ (Lok Sabha Elections )ಸಮೀಪಿಸುತ್ತಿದ್ದಂತೆ ಕಾಂಗ್ರೆಸ್ (Congress) ಎಚ್ಚರಿಕೆಯಿಂದ ಹೆಜ್ಜೆ ಇಡುತ್ತಿದೆ. ಅಳೆದು …

ನಿಮ್ಮದೊಂದು ಉತ್ತರ

ನಿಮ್ಮ ಮಿಂಚಂಚೆ ವಿಳಾಸ ಎಲ್ಲೂ ಪ್ರಕಟವಾಗುವುದಿಲ್ಲ. ಅತ್ಯಗತ್ಯ ವಿವರಗಳನ್ನು * ಎಂದು ಗುರುತಿಸಲಾಗಿದೆ