ಮಂಡ್ಯ: ಕಾವೇರಿ ನೀರು ನಿಯಂತ್ರಣ ಸಮಿತಿ ಆದೇಶದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿರುವ ಮಂಡ್ಯ ಕಾಂಗ್ರೆಸ್ ಶಾಸಕ ಗಣಿಗ ರವಿಕುಮಾರ್, ರಾಜ್ಯ ಸರ್ಕಾರವು ತಮಿಳುನಾಡಿಗೆ ಯಾವುದೇ ಕಾರಣಕ್ಕೂ ನೀರು ಹರಿಸಬಾರದು ಎಂದು ಆಗ್ರಹ ಮಾಡಿದ್ದಾರೆ.
ಮಂಡ್ಯದಲ್ಲಿ ಮಾತನಾಡಿದ ಅವರು, ರಾಜ್ಯದ ಜನತೆ ಹಾಗೂ ರೈತರಿಗೆ ಕುಡಿಯಲು ಮತ್ತು ಕೃಷಿಗೆ ನೀರಿಲ್ಲದ ಬಿಕ್ಕಟ್ಟಿನ ಪರಿಸ್ಥಿತಿ ಎದುರಾಗಿದೆ. ಹೀಗಿರುವಾಗ CWRC ಯಾವ ಆಧಾರದ ಮೇಲೆ ನೀರು ಬಿಡುವಂತೆ ಆದೇಶಿಸಿದೆ ಎಂಬುದು ನಮಗೆ ಅರ್ಥವಾಗುತ್ತಿಲ್ಲ. ನಮ್ಮ ರಾಜ್ಯ ಸರ್ಕಾರ ಈ ಆದೇಶವನ್ನು ಯಾವುದೇ ಕಾರಣಕ್ಕೂ ಪಾಲಿಸಬಾರದು ಎಂದು ಒತ್ತಾಯಿಸಿದ್ದಾರೆ.
ಇತ್ತೀಚೆಗೆ ಮೂರು ದಿನಗಳ ಹಿಂದೆ ತಮಿಳುನಾಡಿಗೆ ಪ್ರವಾಸ ಕೈಗೊಂಡಿದ್ದಾಗಿ ತಿಳಿಸಿದ ಶಾಸಕರು, ಅಲ್ಲಿನ ಪರಿಸ್ಥಿತಿಯನ್ನು ಕಣ್ಣಾರೆ ಕಂಡಿರುವುದಾಗಿ ವಿವರಿಸಿದರು. ನಾನು ಚಿದಂಬರಂ ಬಳಿ ಕಾವೇರಿ ನದಿಯನ್ನು ವೀಕ್ಷಿಸಿದೆ. ಅಲ್ಲಿ ಅಪಾರ ಪ್ರಮಾಣದ ನೀರು ಯಾವುದೇ ಬಳಕೆಯಿಲ್ಲದೆ ನೇರವಾಗಿ ಸಮುದ್ರಕ್ಕೆ ಸೇರುತ್ತಿತ್ತು. ಅವರ ಬಳಿಯೇ ಈಗಾಗಲೇ ಸಾಕಷ್ಟು ಪ್ರಮಾಣದ ನೀರಿದ್ದು, ಅದು ವ್ಯರ್ಥವಾಗಿ ಸಮುದ್ರಕ್ಕೆ ಹರಿಯುತ್ತಿದೆ. ಹೀಗಿರುವಾಗ ನಮ್ಮಿಂದ ಮತ್ತೆ ನೀರು ಕೇಳುವುದು ಯಾವ ನ್ಯಾಯ ಎಂದು ಅವರು ಪ್ರಶ್ನಿಸಿದರು.
ತಮಿಳುನಾಡು ಸಿಎಂ ವಿಜಯ್ ಈ ಬಗ್ಗೆ ಮೊದಲು ಉತ್ತರಿಸಬೇಕು ಎಂದು ಅವರು ಆಗ್ರಹಿಸಿದರು. ಕಾವೇರಿ ನದಿ ನೀರಿನ ವಿವಾದಕ್ಕೆ ಶಾಶ್ವತ ಪರಿಹಾರ ಕಂಡುಕೊಳ್ಳಲು ಮೇಕೆದಾಟು ಅಣೆಕಟ್ಟು ನಿರ್ಮಾಣ ಅತ್ಯಗತ್ಯ ಎಂದು ಶಾಸಕ ಗಣಿಗ ರವಿಕುಮಾರ್ ಪುನರುಚ್ಚರಿಸಿದರು.
ವ್ಯರ್ಥವಾಗಿ ಸಮುದ್ರಕ್ಕೆ ಸೇರುವ ನೀರನ್ನು ಉಳಿಸಿಕೊಳ್ಳಲು ಮೇಕೆದಾಟು ಅಣೆಕಟ್ಟು ನಿರ್ಮಿಸಬೇಕು ಎಂದು ನಾವು ಪದೇ ಪದೆ ಹೇಳುತ್ತಿರುವುದು ಇದೇ ಕಾರಣಕ್ಕಾಗಿಯೇ. ತಮಿಳುನಾಡು ಸರ್ಕಾರಕ್ಕೆ ಬೇಕಿದ್ದರೆ ಅವರ ರಾಜ್ಯದಲ್ಲೇ ಒಂದು ಡ್ಯಾಂ ಕಟ್ಟಿಕೊಂಡು ಪೋಲಾಗುವ ನೀರನ್ನು ಉಳಿಸಿಕೊಳ್ಳಲಿ ಎಂದು ಅವರು ತಿರುಗೇಟು ನೀಡಿದರು.
Laxmi News 24×7