ಬೆಂಗಳೂರು: ಕರ್ನಾಟಕ ಹೈಕೋರ್ಟ್ಗೆ 6 ವಕೀಲರನ್ನು ನ್ಯಾಯಾಧೀಶರನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ಕೊಲಿಜಿಯಂ ಅನುಮೋದನೆ ನೀಡಿದೆ.
ಈ ಕುರಿತು ಸುಪ್ರೀಂಕೋರ್ಟ್ನ ಕೊಲಿಜಿಯಂ ಹೇಳಿಕೆ ಬಿಡುಗಡೆ ಮಾಡಿದೆ. ಜೂ.2ರಂದು ನಡೆದ ಸಭೆಯಲ್ಲಿ ಕರ್ನಾಟಕ ಹೈಕೋರ್ಟ್ನ ಪೀಠಕ್ಕೆ ರಾಘವೇಂದ್ರ ಸೀತಾರಾಮ್ ಶ್ರೀವತ್ಸ, ಹೇಮಾ ಕುಲಕರ್ಣಿ, ಸುಬ್ರಹ್ಮಣ್ಯ ರಂಗರಾವ್, ತಡಗವಾಡಿ ಪ್ರಕಾಶ ವಿವೇಕಾನಂದ, ಬಕ್ಕೇಶ್ವರ ಪ್ರಮೋದ್, ಹೊಂಬೆ ಗೌಡ ಶಾಂತಿಭೂಷಣ್ ಹೆಸರುಗಳನ್ನು ಭಾರತದ ಮುಖ್ಯ ನ್ಯಾಯಮೂರ್ತಿ ನೇತೃತ್ವದ ಮತ್ತು ಸುಪ್ರೀಂ ಕೋರ್ಟ್ನ ಇಬ್ಬರು ಹಿರಿಯ ನ್ಯಾಯಾಧೀಶರನ್ನು ಒಳಗೊಂಡ ಕೊಲಿಜಿಯಂ ಶಿಫಾರಸು ಮಾಡಿದೆ.
ಸುಪ್ರೀಂಕೋರ್ಟ್ ಕೊಲಿಜಿಯಂ ಎಂದರೆ ಭಾರತದ ಸುಪ್ರೀಂಕೋರ್ಟ್ ಮತ್ತು ಹೈಕೋರ್ಟ್ ನ್ಯಾಯಾಧೀಶರನ್ನು ನೇಮಕ ಮಾಡಲು ಮತ್ತು ವರ್ಗಾವಣೆ ಮಾಡಲು ಶಿಫಾರಸು ಮಾಡುವ ನ್ಯಾಯಾಧೀಶರ ಅತ್ಯುನ್ನತ ಸಮಿತಿಯಾಗಿದೆ.
ಸುಪ್ರೀಂಕೋರ್ಟ್ಗೆ ಹೊಸ ನ್ಯಾಯಾಧೀಶರನ್ನು ಮತ್ತು ವಿವಿಧ ರಾಜ್ಯಗಳ ಹೈಕೋರ್ಟ್ಗಳಿಗೆ ಮುಖ್ಯ ನ್ಯಾಯಾಧೀಶರು ಹಾಗೂ ನ್ಯಾಯಾಧೀಶರನ್ನು ನೇಮಿಸಲು ಇವರು ಹೆಸರುಗಳನ್ನು ಶಿಫಾರಸು ಮಾಡುತ್ತಾರೆ. ಜೊತೆಗೆ ಒಂದು ಹೈಕೋರ್ಟ್ನಿಂದ ಮತ್ತೊಂದು ಹೈಕೋರ್ಟ್ಗೆ ನ್ಯಾಯಾಧೀಶರನ್ನು ವರ್ಗಾವಣೆ ಮಾಡುವ ನಿರ್ಧಾರವನ್ನು ಈ ಸಮಿತಿ ತೆಗೆದುಕೊಳ್ಳುತ್ತದೆ.
ಕೊಲಿಜಿಯಂ ಸಮಿತಿಯು ಚರ್ಚಿಸಿ ಅರ್ಹ ನ್ಯಾಯಾಧೀಶರ ಹೆಸರುಗಳ ಪಟ್ಟಿಯನ್ನು ಸಿದ್ಧಪಡಿಸುತ್ತದೆ. ಈ ಪಟ್ಟಿಯನ್ನು ಕೇಂದ್ರ ಕಾನೂನು ಸಚಿವಾಲಯದ ಮೂಲಕ ಪ್ರಧಾನಮಂತ್ರಿ ಮತ್ತು ರಾಷ್ಟ್ರಪತಿಗಳಿಗೆ ಕಳುಹಿಸಲಾಗುತ್ತದೆ. ಸರ್ಕಾರವು ಈ ಹೆಸರುಗಳ ಬಗ್ಗೆ ಪರಿಶೀಲನೆ ನಡೆಸಿ, ಅಂತಿಮವಾಗಿ ರಾಷ್ಟ್ರಪತಿಗಳ ಅಂಕಿತದೊಂದಿಗೆ ನ್ಯಾಯಾಧೀಶರ ನೇಮಕಾತಿ ಪ್ರಕ್ರಿಯೆ ಪೂರ್ಣಗೊಳ್ಳುತ್ತದೆ.
ಕೊಲಿಜಿಯಂ ಕಳುಹಿಸಿದ ಹೆಸರನ್ನು ಸರ್ಕಾರವು ಒಮ್ಮೆ ಮರುಪರಿಶೀಲನೆಗೆ ವಾಪಸ್ ಕಳುಹಿಸಬಹುದು. ಆದರೆ, ಕೊಲಿಜಿಯಂ ಮತ್ತೊಮ್ಮೆ ಅದೇ ಹೆಸರನ್ನು ಶಿಫಾರಸು ಮಾಡಿದರೆ, ಸರ್ಕಾರ ಅದನ್ನು ಒಪ್ಪಿಕೊಳ್ಳುವುದು ಕಡ್ಡಾಯವಾಗಿರುತ್ತದೆ.
Laxmi News 24×7