ನವದೆಹಲಿ: ನಾಡಗೀತೆ ಧಾಟಿ ಮತ್ತು ಅವಧಿ ನಿಗದಿ ವಿಚಾರದಲ್ಲಿ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶಕ್ಕೆ ಸುಪ್ರೀಂ ಕೋರ್ಟ್ ನಿರಾಕರಿಸಿದೆ.
ಹೈಕೋರ್ಟ್ ಆದೇಶ ಪ್ರಶ್ನಿಸಿ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಇಂದು ಸುಪ್ರೀಂ ಕೋರ್ಟ್ನಲ್ಲಿ ನಡೆಯಿತು. ನ್ಯಾ.ಬಿ.ವಿ ನಾಗರತ್ನ ನೇತೃತ್ವದ ದ್ವಿ ಸದಸ್ಯ ಪೀಠದಲ್ಲಿ ನಡೆದ ವಿಚಾರಣೆಯಲ್ಲಿ ನಾಡಗೀತೆಯಲ್ಲಿ ಏಕರೂಪತೆ ಇರಬೇಕು. ಸಮಯ ಮತ್ತು ರಾಗದಲ್ಲಿ ಏಕರೂಪತೆ ಇರಬೇಕು. ಈ ಹಿನ್ನಲೆ ಹೈಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶ ಇಲ್ಲ ಎಂದು ಸುಪ್ರೀಂ ಕೋರ್ಟ್ ಆದೇಶಿಸಿದೆ.
ರಾಷ್ಟ್ರಕವಿ ಕುವೆಂಪು ರಚಿತ `ಜಯ ಭಾರತ ಜನನಿಯ ತನುಜಾತೆ’ ನಾಡಗೀತೆಯನ್ನು ಮೈಸೂರು ಅನಂತಸ್ವಾಮಿ ಸಂಯೋಜಿಸಿರುವ ದಾಟಿಯಲ್ಲಿ, 2 ನಿಮಿಷ 30 ಸೆಕೆಂಡ್ಗಳ ಕಾಲಾವಧಿಯಲ್ಲಿ ಹಾಡಬೇಕು ಎಂದು ರಾಜ್ಯ ಸರ್ಕಾರ 2022ರ ಸೆಪ್ಟೆಂಬರ್ನಲ್ಲಿ ಆದೇಶ ಹೊರಡಿಸಿತ್ತು. ಸರ್ಕಾರದ ಈ ನಿರ್ಧಾರವನ್ನು ಪ್ರಶ್ನಿಸಿ ಸುಗಮ ಸಂಗೀತ ಗಾಯಕ ಕಿಕ್ಕೇರಿ ಕೃಷ್ಣಮೂರ್ತಿ ಹೈಕೋರ್ಟ್ ಮೆಟ್ಟಿಲೇರಿದ್ದರು. ಅರ್ಜಿ ವಿಚಾರಣೆ ನಡೆಸಿದ್ದ ಹೈಕೋರ್ಟ್, ನಾಡಗೀತೆ ಧಾಟಿ ಮತ್ತು ಅವಧಿ ನಿಗದಿ ವಿಚಾರದಲ್ಲಿ ಸರ್ಕಾರದ ತಿರ್ಮಾನವೇ ಅಂತಿಮ ಎಂದು ತೀರ್ಪು ನೀಡಿತ್ತು. ಆದರೆ ರಾಗ ಮತ್ತು ಅವಧಿ ವಿಚಾರದಲ್ಲಿ ಸರ್ಕಾರ ನಿರ್ದೇಶನ ನೀಡುವಂತಿಲ್ಲ ಎಂದು ಕಿಕ್ಕೇರಿ ಕೃಷ್ಣಮೂರ್ತಿ ವಾದವಾಗಿತ್ತು. ಹೈಕೋರ್ಟ್ ಆದೇಶ ಪ್ರಶ್ನಿಸಿ ಕಿಕ್ಕೇರಿ ಕೃಷ್ಣಮೂರ್ತಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ್ದರು.
Laxmi News 24×7