ಬೆಂಗಳೂರು: ವೈರಸ್ಗೆ ಜಾತಿ ಇಲ್ಲ. ಹಾಗಾಗಿ ಒಂದು ವಾರ ಮಂದಿರ, ಮಸೀದಿಗಳಿಗೆ ದಯವಿಟ್ಟು ಹೋಗಬೇಡಿ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ.ಸುಧಾಕರ್ ಮನವಿ ಮಾಡಿಕೊಂಡಿದ್ದಾರೆ.
ವಿಕ್ಟೋರಿಯಾ ಆಸ್ಪತ್ರೆಯ ಅಧೀಕ್ಷಕರ ಜೊತೆ ವೈದ್ಯಕೀಯ ಶಿಕ್ಷಣ ಸಚಿವರು ಇಂದು ಸಭೆ ನಡೆಸಿದರು. ಬಳಿಕ ಪಬ್ಲಿಕ್ ಟಿವಿ ಜೊತೆಗೆ ಮಾತನಾಡಿದ ಅವರು, ನಿನ್ನೆ ಸಿಕ್ಕಿರುವ ಮಾಹಿತಿ ಪ್ರಕಾರ ವಿದೇಶದಿಂದ ಬಂದಿರುವ ಓರ್ವ ವಿದ್ಯಾರ್ಥಿನಿ ಹಾಗೂ ಅವರನ್ನು ಕರೆದುಕೊಂಡ ಬಂದ ವೈದ್ಯರೊಬ್ಬರಿಗೆ ವೈರಸ್ ಸೋಂಕು ತಗುಲಿರುವ ಶಂಕೆ ವ್ಯಕ್ತವಾಗಿದೆ. ಈ ಹಿನ್ನೆಲೆಯಲ್ಲಿ ಸಭೆ ನಡೆಸಿ ಸೂಕ್ತ ಮುಂಜಾಗ್ರತಾ ಕ್ರಮ ಕೈಗೊಳ್ಳುವಂತೆ ವೈದ್ಯರಿಗೆ ಸೂಚನೆ ನೀಡಿದ್ದೇನೆ ಎಂದು ಮಾಹಿತಿ ನೀಡಿದರು
ಕರ್ನಾಟಕ ಬಂದ್ ವಿಸ್ತರಣೆ ವಿಚಾರವಾಗಿ ಪ್ರತಿಕ್ರಿಯೆ ನೀಡಿದ ಸಚಿವರು, ರಾಜ್ಯದಲ್ಲಿ ಕೊರೊನಾ ವೈಸರ್ ಪ್ರಕರಣಗಳು ಹೆಚ್ಚಾಗುತ್ತಿವೆ. ಅಷ್ಟೇ ಅಲ್ಲದೆ ಸೋಂಕಿತರಿಗೆ ನಿಖರ ಚಿಕಿತ್ಸೆ, ಔಷಧಿ ಇಲ್ಲದೆ ಇರುವುದರಿಂದ ಮುಂಜಾಗ್ರತ ಕ್ರಮವಾಗಿ ಬಂದ್ ವಿಸ್ತರಣೆ ಮಾಡವುದು ಅಗತ್ಯವಿದೆ ಎಂದು ತಿಳಿಸಿದರು
ಬೆಂಗಳೂರಿನಲ್ಲಿ ಒಂದು ಕೋಟಿಗೂ ಅಧಿಕ ಜನರು ವಾಸಿಸುತ್ತಾರೆ. ಹಾಗಾಗಿ ಸಹಜವಾಗಿಯೇ ಬೆಂಗಳೂರು ಮಹಾನಗರ ಪಾಲಿಕೆ ನಮಗೆ ದೊಡ್ಡ ಸಮಸ್ಯೆ ಹಾಗೂ ಸವಾಲಾಗಿ ಪರಿಣಮಿಸಿದೆ. ಕಲಬುರಗಿಯಲ್ಲಿ ಓರ್ವರಿಂದ ಅನೇಕರಿಗೆ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಈಗಾಗಲೇ ಒಬ್ಬರಿಗೆ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದನ್ನು ನಿಗ್ರಹಿಸುವ ನಿಟ್ಟಿನಲ್ಲಿ ಅಧಿಕಾರಿಗಳು ಶ್ರಮಿಸುತ್ತಿದ್ದಾರೆ ಎಂದು ತಿಳಿಸಿದರು.