ನವದೆಹಲಿ: ಜಂತರ್ ಮಂತರ್ನಲ್ಲಿ ನಡೆಯುತ್ತಿರುವ ಕಾಕ್ರೋಚ್ ಜನತಾ ಪಾರ್ಟಿ ನೇತೃತ್ವದ ಪ್ರತಿಭಟನೆಗೆ ಸಂಬಂಧಿಸಿದಂತೆ ಮಹತ್ವದ ಬೆಳವಣಿಗೆ ನಡೆದಿದೆ. ಕೇಂದ್ರ ಸರ್ಕಾರ ನಮ್ಮನ್ನ ಸಂಪರ್ಕಿಸುತ್ತಿದೆ, ಒಂದು ವೇಳೆ ಸರ್ಕಾರ ಮಾತುಕತೆ ನಡೆಸಲು ಮುಂದಾದ್ರೆ ನಾವು ಸಂಪೂರ್ಣ ಸಿದ್ಧ ಎಂದು ಸಿಜೆಪಿ ರಾಷ್ಟ್ರೀಯ ವಕ್ತಾರ ಅಶುತೋಷ್ ರಾಂಕಾ ಹೇಳಿದ್ದಾರೆ.
ಈ ಸಂಬಂಧ ಮಾತನಾಡಿರುವ ಅವರು, ಮಾತುಕತೆ ಜಂತರ್ ಮಂತರ್ನಲ್ಲೇ ನಡೆಯಬಹುದು ಅಥವಾ ಉಭಯಪಕ್ಷಗಳು ಒಪ್ಪುವ ತಟಸ್ಥ ಸ್ಥಳದಲ್ಲೂ ನಡೆಸಬಹುದು ಎಂದು ಅವರು ತಿಳಿಸಿದ್ದಾರೆ. ಈ ಬಾರಿ ಸಮಯ ವ್ಯರ್ಥವಾಗುವುದಿಲ್ಲ. ನಮ್ಮ 4 ಪ್ರಮುಖ ಬೇಡಿಕೆಗಳ ಕುರಿತು ಸ್ಪಷ್ಟ ನಿರ್ಧಾರ ಬೇಕು ಎಂದಿದ್ದಾರೆ.
ಇದೇ ವೇಳೆ ಪ್ರತಿಭಟನೆಯಲ್ಲಿ ಭಾಗವಹಿಸಲು ಅಭಿಜಿತ್ ದೀಪ್ಕೆ ಮತ್ತೆ ಜಂತರ್ ಮಂತರ್ಗೆ ಆಗಮಿಸಿದ್ದು, ಅಶುತೋಷ್ ರಾಂಕಾ ಅಲ್ಲಿಂದ ತೆರಳಿದ್ದಾರೆ. ಶೀಘ್ರದಲ್ಲೇ ಗೊತ್ತುಪಡಿಸಿದ ಸ್ಥಳದಲ್ಲಿ ಸರ್ಕಾರ ಮತ್ತು ಪ್ರತಿಭಟನಾಕಾರರ ನಡುವೆ ಮಾತುಕತೆ ನಡೆಯುವ ಸಾಧ್ಯತೆ ಇದೆ ಎಂದು ಸಿಜೆಪಿ ವಕ್ತಾರ ಸೌರಭ್ ದಾಸ್ ತಿಳಿಸಿದ್ದಾರೆ.
ಇನ್ನೊಂದೆಡೆ, ಲೋಕಸಭೆಯಲ್ಲೂ ಈ ವಿಚಾರ ಪ್ರತಿಧ್ವನಿಸಿದೆ. ನೀಟ್ ಪ್ರಶ್ನೆಪತ್ರಿಕೆ ಸೋರಿಕೆ ಪ್ರಕರಣದ ಕುರಿತು ಚರ್ಚೆ ನಡೆಸಲು ಕೇಂದ್ರ ಸರ್ಕಾರ ಸಿದ್ಧವಿದೆ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ. ಆದರೆ ಯಾವ ನಿಯಮದಡಿ, ಯಾವ ದಿನ ಹಾಗೂ ಎಷ್ಟು ಅವಧಿಗೆ ಚರ್ಚೆ ನಡೆಸಬೇಕು ಎಂಬುದನ್ನು ಸ್ಪೀಕರ್ ಓಂ ಬಿರ್ಲಾ ಸರ್ವ ಪಕ್ಷಗಳ ಸಭೆ ನಡೆಸಿ ನಿರ್ಧರಿಸಲಿದ್ದಾರೆ ಎಂದು ಅವರು ಹೇಳಿದ್ದಾರೆ.
ಪ್ರತಿಪಕ್ಷಗಳು ತಮ್ಮ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ ಎಂದು ಸ್ಪಷ್ಟಪಡಿಸಿವೆ. ನೀಟ್ ಪರೀಕ್ಷೆಯಲ್ಲಿನ ಅಕ್ರಮಗಳ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ನೀಡಬೇಕು ಎಂಬ ಬೇಡಿಕೆಯನ್ನ ಕಾಂಗ್ರೆಸ್ ಸೇರಿದಂತೆ ಪ್ರತಿಪಕ್ಷಗಳು ಮತ್ತೊಮ್ಮೆ ಒತ್ತಾಯಿಸಿವೆ.
ಇದರ ನಡುವೆ, ಸಿಜೆಪಿ ಪ್ರತಿಭಟನೆಯ ವೇಳೆ ವಿದ್ಯಾರ್ಥಿಗಳ ವಿರುದ್ಧ ಪೊಲೀಸರು ಕೈಗೊಂಡ ಕ್ರಮವನ್ನ ಪ್ರಶ್ನಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ತುರ್ತುವಾಗಿ ವಿಚಾರಣೆಗೆ ಕೈಗೆತ್ತಿಕೊಳ್ಳುವಂತೆ ಮಾಡಿದ್ದ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.
Laxmi News 24×7