ಬೆಂಗಳೂರು: ರಾಜ್ಯದ ದಕ್ಷಿಣ ಒಳನಾಡಿನ ಬೆಂಗಳೂರು ನಗರ ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಹಾಸನ, ಚಾಮರಾಜನಗರ ಹಾಗೂ ಮೈಸೂರು ಸೇರಿದಂತೆ ಒಟ್ಟು 8 ಜಿಲ್ಲೆಗಳಲ್ಲಿ ಮುಂದಿನ 3 ಗಂಟೆಗಳಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಮಳೆಯ ಸಂದರ್ಭದಲ್ಲಿ ಗಂಟೆಗೆ 30 ರಿಂದ 40 ಕಿಲೋಮೀಟರ್ ವೇಗದಲ್ಲಿ ಬಿರುಗಾಳಿ ಬೀಸುವ ಸಾಧ್ಯತೆಯಿದ್ದು, ಸಾರ್ವಜನಿಕರು ಎಚ್ಚರಿಕೆಯಿಂದ ಇರುವಂತೆ ಸೂಚಿಸಲಾಗಿದೆ.
ಬೆಂಗಳೂರು ನಗರ ಸೇರಿದಂತೆ ಪ್ರಮುಖ ಭಾಗಗಳಲ್ಲಿ ಮಳೆ ಮತ್ತು ಬಿರುಗಾಳಿಯಿಂದಾಗಿ ಸಂಚಾರ ದಟ್ಟಣೆ ಹಾಗೂ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗುವ ಸಾಧ್ಯತೆಯಿದೆ. ಗಾಳಿಯ ತೀವ್ರತೆಗೆ ದುರ್ಬಲ ಮರಗಳು ಹಾಗೂ ಮರದ ಕೊಂಬೆಗಳು ಮುರಿದು ಬೀಳುವ ಸಂಭವವಿದೆ.
ಕಟಾವು ಮಾಡಿದ ಬೆಳೆಗಳು ಮಳೆಗೆ ಸಿಲುಕಿ ಹಾನಿಯಾಗದಂತೆ ತಡೆಯಲು ಅವುಗಳನ್ನು ಯಾವುದೇ ಕಾರಣಕ್ಕೂ ತೆರೆದ ಸ್ಥಳಗಳಲ್ಲಿ ಇಡಬೇಡಿ. ಬೆಳೆಗಳನ್ನು ತಕ್ಷಣವೇ ಸುರಕ್ಷಿತ ಹಾಗೂ ಒಣ ಜಾಗಗಳಿಗೆ ಸ್ಥಳಾಂತರಿಸುವಂತೆ ಸೂಚಿಸಲಾಗಿದೆ.
ಜನರಿಗೆ ಸೂಚನೆಗಳು
– ಮಳೆ ಹಾಗೂ ಗಾಳಿಯ ಸಮಯದಲ್ಲಿ ಮನೆಯೊಳಗೇ ಸುರಕ್ಷಿತವಾಗಿರಿ.
– ಗುಡುಗು-ಮಿಂಚಿನ ಸಂದರ್ಭದಲ್ಲಿ ಮರಗಳ ಕೆಳಗೆ ಆಶ್ರಯ ಪಡೆಯಬೇಡಿ.
– ಕೆರೆ, ನದಿ ಹಾಗೂ ಹಳ್ಳ-ಕೊಳ್ಳ ಸೇರಿದಂತೆ ಯಾವುದೇ ಜಲಮೂಲಗಳ ಹತ್ತಿರ ಸುಳಿಯಬೇಡಿ.
Laxmi News 24×7