ಬೆಂಗಳೂರು: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಹಾಗೂ ಹೈಕಮಾಂಡ್ ನಿರ್ಧಾರಗಳ ಕುರಿತು ಭಾರೀ ಚರ್ಚೆ ನಡೆಯುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ರಾಜಕೀಯ ಪ್ರಶ್ನೆಗಳಿಗೆ ನಾಳೆ ಉತ್ತರ ನೀಡುತ್ತೇನೆ ಎಂದು ಹೇಳಿದ್ದಾರೆ.
ಇಂದು ಮಾಜಿ ಪ್ರಧಾನಿ ಜವಹರಲಾಲ್ ನೆಹರು ಅವರ 62ನೇ ಪುಣ್ಯತಿಥಿಯ ಅಂಗವಾಗಿ ವಿಧಾನಸೌಧದ ಆವರಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ಸಿಎಂ ಭಾಗಿಯಾಗಿದರು. ಜವಾಹರಲಾಲ್ ನೆಹರು ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿ ಗೌರವ ಸಮರ್ಪಿಸಿದ ಬಳಿಕ ನೆಹರು ಅವರು ದೇಶಕ್ಕೆ ನೀಡಿದ ಕೊಡುಗೆಯನ್ನು ಕೊಂಡಾಡಿದರು.
ಈ ವೇಳೆ ಮಾಧ್ಯಮಗಳು ರಾಜ್ಯ ರಾಜಕೀಯದ ಸದ್ಯದ ಬೆಳವಣಿಗೆಗಳು, ದೆಹಲಿ ಪ್ರವಾಸದ ಬಗ್ಗೆ ಪ್ರಶ್ನಿಸಿದಾಗ ಮುಖ್ಯಮಂತ್ರಿಗಳು ಯಾವುದೇ ಪ್ರತಿಕ್ರಿಯೆ ನೀಡಲಿಲ್ಲ.
ರಾಜಕೀಯ ವಿದ್ಯಮಾನಗಳ ಕುರಿತು ಕೇಳಿದಾಗ, “ನಾಳೆ ಮಾತನಾಡುತ್ತೇನೆ, ಏನೇ ಇದ್ದರೂ ನಾಳೆಯೇ ಮಾತನಾಡುತ್ತೇನೆ” ಎಂದು ಕೇವಲ ಒಂದೇ ಸಾಲಿನಲ್ಲಿ ಉತ್ತರಿಸಿ ಸಿದ್ದರಾಮಯ್ಯ ಅವರು ಅಲ್ಲಿಂದ ಹೊರಟರು.
ಸಾಧಾರಣವಾಗಿ ಸಿದ್ದರಾಮಯ್ಯನವರು ಹೇಳಿಕೆ ನೀಡುವಾಗ ಬಹಳ ಗಟ್ಟಿಯಾಗಿ ಮಾತನಾಡುತ್ತಾರೆ. ಮಾಧ್ಯಮಗಳು ಅಡ್ಡ ಪ್ರಶ್ನೆ ಹಾಕಿದರೆ ಏನಯ್ಯ ಎಂದು ಹೇಳಿ ಪತ್ರಕರ್ತರಿಗೆ ಮರು ಪ್ರಶ್ನೆ ಹಾಕುತ್ತಾರೆ. ಆದರೆ ಇಂದು ಮಾತನಾಡುವಾಗಲೇ ಸಿದ್ದರಾಮಯ್ಯ ಬಹಳ ಬೇಸರದಲ್ಲಿ ಇದ್ದಾರೆ ಎನ್ನುವುದು ಸ್ಪಷ್ಟವಾಗಿ ಕಾಣಿಸುತ್ತಿತ್ತು.
ಈ ಕಾರ್ಯಕ್ರಮದ ಬಳಿಕ ಇಂದು ಸಿಎಂ ಅವರಿಗೆ ಯಾವುದೇ ಸರ್ಕಾರಿ ಕಾರ್ಯಕ್ರಮ ನಿಗದಿಯಾಗಿಲ್ಲ. ಹೀಗಾಗಿ ಇಂದಿನ ಕೊನೆಯ ಸರ್ಕಾರಿ ಕಾರ್ಯಕ್ರಮವನ್ನು ಮುಗಿಸಿದ ಮುಖ್ಯಮಂತ್ರಿಗಳು ಅವರು ವಿಧಾನಸೌಧದಿಂದ ನೇರವಾಗಿ ತಮ್ಮ ಅಧಿಕೃತ ಸರ್ಕಾರಿ ನಿವಾಸ ಕಾವೇರಿಗೆ ವಾಪಸ್ ಮರಳಿದ್ದಾರೆ.
ಸಿದ್ದರಾಮಯ್ಯನವರು ನಾಳೆ ಬೆಳಗ್ಗೆ ತಮ್ಮ ಆಪ್ತ ಸಚಿವರು, ಶಾಸಕರ ಜೊತೆ ಬ್ರೇಕ್ಫಾಸ್ಟ್ ಸಭೆ ನಡೆಸಲಿದ್ದಾರೆ. ಸಭೆಯ ಬಳಿಕ ರಾಜಭವನಕ್ಕೆ ತೆರಳಿ ರಾಜೀನಾಮೆ ನೀಡಲಿದ್ದಾರೆ. ರಾಜೀನಾಮೆ ನೀಡಿದ ಬಳಿಕ ಸುದ್ದಿಗೋಷ್ಠಿ ನಡೆಸಿ ಎಲ್ಲಾ ಪ್ರಶ್ನೆಗಳಿಗೆ ಉತ್ತರ ನೀಡಲಿದ್ದಾರೆ.
Laxmi News 24×7