ಬೆಂಗಳೂರು: ಸಿಗರೇಟ್ ಸೇದುವ ವಿಚಾರಕ್ಕೆ ಗಲಾಟೆ ನಡೆದು ಯುವಕನ ಬರ್ಬರ ಹತ್ಯೆಗೈದ 8 ಮಂದಿಗೆ ಕೋರ್ಟ್ ಜೀವಾವಧಿ ಶಿಕ್ಷೆ ವಿಧಿಸಿದೆ
ಬೆಂಗಳೂರಿನ ಶಾಂತಿನಗರ ವ್ಯಾಪ್ತಿಯಲ್ಲಿ 2017ರಲ್ಲಿ ಸಿಗರೇಟ್ ಸೇದುವ ವಿಚಾರವಾಗಿ ಹರೀಶ್ ಎಂಬ ಯುವಕನೊಂದಿಗೆ ಗಲಾಟೆ ನಡೆದಿತ್ತು. ಮಾತಿಗೆ ಮಾತು ಬೆಳೆದು ಆರೋಪಿಗಳ ಗುಂಪು ಹರೀಶ್ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಬರ್ಬರವಾಗಿ ಹತ್ಯೆ ಮಾಡಿತ್ತು.
ಘಟನೆ ಸಂಬಂಧ ಅಶೋಕನಗರ ಪೊಲೀಸ್ ಠಾಣೆಯಲ್ಲಿ ಕೊಲೆ ಪ್ರಕರಣ ದಾಖಲಾಗಿತ್ತು. ತನಿಖೆ ಕೈಗೆತ್ತಿಕೊಂಡ ಪೊಲೀಸರು ಮೂವರು ಅಪ್ರಾಪ್ತರು ಸೇರಿದಂತೆ ಒಟ್ಟು 13 ಮಂದಿ ಆರೋಪಿಗಳನ್ನು ಬಂಧಿಸಿ, ನ್ಯಾಯಾಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ದರು.
ಸುದೀರ್ಘ ವಿಚಾರಣೆ ನಡೆಸಿದ 59ನೇ ಸಿಸಿಎಚ್ ನ್ಯಾಯಾಲಯದ ನ್ಯಾಯಾಧೀಶರು, ಸಾಕ್ಷ್ಯಾಧಾರಗಳನ್ನು ಪರಿಶೀಲಿಸಿ ಆರೋಪಿಗಳ ಮೇಲಿನ ಕೊಲೆ ಕೃತ್ಯ ಸಾಬೀತಾಗಿದೆ ಎಂದು ತೀರ್ಪು ನೀಡಿದ್ದಾರೆ. ಪ್ರಕರಣದಲ್ಲಿದ್ದ ಮೂವರು ಅಪ್ರಾಪ್ತರನ್ನು ಹೊರತುಪಡಿಸಿ, ಪ್ರಮುಖ 8 ಮಂದಿ ಆರೋಪಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಲಾಗಿದೆ.
ವೆಂಕಟೇಶ್, ವಿಜಯ್, ವಿನೋದ್, ಜೆರಾಲ್ಡ್ ಆರೋಗ್ಯ ರಾಜ್, ಜೇಮ್ಸ್ ಕುಮಾರ್, ಕಿರಣ್, ವಿಕ್ರಮ್ ಮತ್ತು ಮತ್ತೋರ್ವ ವಿಜಯ್ಗೆ ಶಿಕ್ಷೆ ವಿಧಿಸಲಾಗಿದೆ.
Laxmi News 24×7